ಕನ್ನಡಪ್ರಭ ವಾರ್ತೆ ಶಹಾಪುರ
ನದಿ ಪಾತ್ರದ ಗ್ರಾಮಗಳ ಜನರು ನದಿಗೆ ಇಳಿಯದಂತೆ ಹಾಗೂ ತಮ್ಮ ಜಾನುವಾರಗಳೊಂದಿಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಪ್ರವಾಹದ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸೂಚಿಸಲಾಗಿದೆ ಎಂದು ತಹಸಿಲ್ದಾರ್ ಉಮಾಕಾಂತ್ ಹಳ್ಳೆ ತಿಳಿಸಿದ್ದಾರೆ.
ಯಾದಗಿರಿ, ರಾಯಚೂರು, ಕಲಬುರ್ಗಿ ಮೂರು ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ.ತಾಲೂಕಿನ ಕೊಳ್ಳೂರ (ಎಂ) ಗ್ರಾಮದ ಕೃಷ್ಣಾ ನದಿ ಸೇತುವೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಸೇತುವೆ ಮುಳುಗಡೆ ಭೀತಿಯಿಂದಾಗಿ ಪೊಲೀಸರನ್ನು ನಿಯೋಜಿಸಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಚಿನ ಹೊರ ಹರಿವಿನಿಂದ ಕೃಷ್ಣಾ ನದಿ ಪಾತ್ರದ 23 ಹಳ್ಳಿಗಳಿಗೆ ಪ್ರವಾಹದ ಭೀತಿ ಮತ್ತೆ ಎದುರಾಗಿದೆ. ನದಿ ದಂಡೆಯ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದ್ದು. ನದಿ ದಂಡೆಯ ಅಕ್ಕಪಕ್ಕದ ಗ್ರಾಮಸ್ಥರು ನದಿಯ ಸಮೀಪ ಹೋಗದಂತೆ ಗ್ರಾಮಗಳಲ್ಲಿ ಡಂಗೂರ ಹಾಕಿಸಲು ತಿಳಿಸಲಾಗಿದೆ.
ಈ ವೇಳೆ ನೋಡಲ್ ಅಧಿಕಾರಿ ಬಿಸಿಎಂ ಇಲಾಖೆಯ ಉಪನಿರ್ದೇಶಕ ಗಂಗಾಧರ ದೊಡ್ಮನಿ, ಉಪತಹಸಿಲ್ದಾರ್ ಸಂಗಮೇಶ್, ಎಎಸ್ಐ ವಿಠ್ಠಲ್, ಕೊಳ್ಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮರ್ದಾನೆಪ್ಪ ಇಂಗಳಗಿ ಸೇರಿದಂತೆ ಕಂದಾಯ, ಪೊಲೀಸ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.