ಮುಖ್ಯಮಂತ್ರಿ ಸ್ವಾಗತಕ್ಕೆ ಕೊಪ್ಪಳ ಸಜ್ಜು

KannadaprabhaNewsNetwork |  
Published : Oct 06, 2025, 01:01 AM IST
5ಕೆಪಿಎಲ್21 ಕೊಪ್ಪಳ ನಗರದ ಅಗಡಿ ಲೇ  ಔಟ್ ನಲ್ಲಿ ಹಾಕಲಾಗಿರುವ ವಿಧಾನಸೌಧ ಮಾದರಿಯ ವೇದಿಕೆ 5ಕೆಪಿಎಲ್ 22 ಸಿ.ಎಂ. ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಸಜ್ಜಾಗಿರುವ ವೇದಿಕೆ | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಸೇರಿದಂತೆ ಹತ್ತಾರು ಸಚಿವರು ಭಾಗಿಯಾಗಲಿದ್ದಾರೆ

ಸೋಮರಡ್ಡಿ ಅಳವಂಡಿ ಕೊಪ್ಪಳ

ಸುಮಾರು ₹2 ಸಾವಿರ ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಗಾಗಿ ಅ. 6ರಂದು ಸಿಎಂ ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಹೊಸಪೇಟೆ ರಸ್ತೆಯ ಅಗಡಿ ಲೇ ಔಟ್‌ನಲ್ಲಿ ವಿಧಾನಸೌಧ ಮಾದರಿಯಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ, ಬಿಗಿ ಭದ್ರತೆ ಒದಗಿಸಲಾಗಿದೆ. ಇದಕ್ಕಾಗಿ ನಗರದಾದ್ಯಂತ ಬ್ಯಾನರ್, ಬಂಟಿಗ್ಸ್, ಪ್ಲೆಕ್ಸ್‌ಗಳು ರಾರಾಜಿಸುತ್ತಿದ್ದು, ರಾಜಕೀಯ ನಾಯಕರು ಪೈಪೋಟಿಯಲ್ಲಿ ಬ್ಯಾನರ್ ಹಾಕಿಸಿಕೊಂಡು ತಮ್ಮ ನಾಯಕರ ಸ್ವಾಗತಕ್ಕೆ ಸಿದ್ಧರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಸೇರಿದಂತೆ ಹತ್ತಾರು ಸಚಿವರು ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ ಕೋರ್ಟ್ ಕೆಲಸ ನಿಮಿತ್ತ ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ಏನೇನು ಕಾರ್ಯಕ್ರಮ?:ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ₹2005 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ 34 ವಸತಿ ನಿಲಯಗಳು ಹಾಗೂ ಕರ್ನಾಟಕದ 41 ವಿಧಾನಸಭಾ ಕ್ಷೇತ್ರಕ್ಕೆ 2 ವಸತಿ ನಿಲಯಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ತಳಕಲ್‌ನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ, ಕುಕನೂರು, ಯಲಬುರ್ಗಾ, ಕನಕಗಿರಿ ತಾಲೂಕು ಕೇಂದ್ರಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ, ಕೊಪ್ಪಳ ಕಿಮ್ಸ್ ಆಸ್ಪತ್ರೆಯ ಉದ್ಘಾಟನೆ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ, ಗಂಗಾವತಿ ತಾಲೂಕಿನ 27 ಕೆರೆ ತುಂಬಿಸುವ ಯೋಜನೆಗೆ ಭೂಮಿಪೂಜೆ, ಕನಕಗಿರಿ ತಾಲೂಕಿನ ಶಿರವಾರದಲ್ಲಿ ಹೈಟೆಕ್ ತೋಟಗಾರಿಕಾ ಪಾರ್ಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿದಂತೆ ಹತ್ತು ಹಲವು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಕನಕದಾಸ ಮೂರ್ತಿ ಅನಾವರಣ: ಇದೇ ಸಂದರ್ಭದಲ್ಲಿ ಕೊಪ್ಪಳ ಬಸ್ ನಿಲ್ದಾಣದ ಎದುರಿಗೆ ಸ್ಥಾಪಿಸಲಾಗಿರುವ ಕನಕದಾಸ ಮೂರ್ತಿಯ ಅನಾವರಣ, ಭಾಗ್ಯನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

ಭದ್ರತೆಗಾಗಿ ಕ್ಯಾಮೆರಾ: ಮುಖ್ಯ ಹಾಗೂ ಸಮಾನಾಂತರ ಮೂರು ಬೃಹತ್ ವೇದಿಕೆಯಲ್ಲಿ ಸುರಕ್ಷತೆಗೆ ಅನುಕೂಲವಾಗುವಂತೆ ಎಲ್ಲ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಎಲ್ಲೆಡೆ ಖಾಕಿಪಡೆ: ಮಹತ್ವದ ಕಾರ್ಯಕ್ರಮ ಯಶ ಕಾಣುವ ದಿಶೆಯಲ್ಲಿ ಸೂಕ್ತ ಭದ್ರತೆಗಾಗಿ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ನೇತೃತ್ವದಲ್ಲಿ ಪೊಲೀಸ್ ಇಲಾಖೆಯು ಸಕಲ ಸಿದ್ಧತೆ ಮಾಡಿದೆ.

ಸವಲತ್ತು ವಿತರಣೆ: ಬೃಹತ್ ಪ್ರಮಾಣದಲ್ಲಿ ಕೃಷಿ, ತೋಟಗಾರಿಕಾ ಹಾಗೂ ಇನ್ನಿತರ ಸಲಕರಣೆ ಮತ್ತು ಯಂತ್ರಗಳನ್ನು ವೇದಿಕೆಯ ಪಕ್ಕದಲ್ಲಿ ಇಡಲಾಗಿದ್ದು, ಈ ಸವಲತ್ತು ವಿತರಣೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಕಾರ್ಖಾನೆ ಬಾಧಿತರ ಅಹವಾಲು ಆಲಿಸಿ: ಕೊಪ್ಪಳ ತಾಲೂಕಿನಾದ್ಯಂತ ಈಗಾಗಲೇ ಇರುವ ಕಾರ್ಖಾನೆಗಳಿಂದ 20ಕ್ಕೂ ಅಧಿಕ ಗ್ರಾಮಗಳು ತತ್ತರಿಸಿ ಹೋಗಿದ್ದು, ಅಲ್ಲಿಯ ಜನರು ಬದುಕು ನರಕವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಖಾನೆ ಬಾಧಿತ ಗ್ರಾಮಗಳಿಗೆ ಭೇಟಿ ನೀಡುವಂತೆ ಕೊಪ್ಪಳ ಬಚಾವೋ ಆಂದೋಲನ ಸಮಿತಿ ಹಾಗೂ ಕೊಪ್ಪಳ ತಾಲೂಕು ಪರಿಸರ ಹೋರಾಟ ಸಮಿತಿ ಜಂಟಿ ಕ್ರಿಯಾ ಸಮಿತಿ ಆಗ್ರಹಿಸಿವೆ.

ಮುಖ್ಯಮಂತ್ರಿ ಈಗಲಾದರೂ ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಗಿತಕ್ಕೆ ತಾವು ಮಾಡಿರುವ ಮೌಖಿಕ ಆದೇಶವನ್ನು ಲಿಖಿತ ರೂಪದಲ್ಲಿ ಮಾಡುವ ಮೂಲಕ ಕೊಪ್ಪಳ ಜಿಲ್ಲೆಯ ಜನರ ಹಿತ ಕಾಯುವಂತೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಈ ಕುರಿತು ಹೋರಾಟಗಾರರ ಅಹವಾಲು ಆಲಿಸುವುದಕ್ಕೆ ಸಮಯ ನಿಗದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಗೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಮತ್ತು ವೇದಿಕೆಯ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಷಕ್ಕೂ ಅಧಿಕ ಜನರು ಸೇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಸುಮಾರು ₹2 ಸಾವಿರ ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅದರಲ್ಲೂ ಕಿಮ್ಸ್ ಆಸ್ಪತ್ರೆಯ ಉದ್ಘಾಟನೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಕೊಪ್ಪಳಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ