ಕಲಬುರಗಿ: ನಾಲವಾರದ ವಿಶಿಷ್ಟ ತನಾರತಿ ಉತ್ಸವ

KannadaprabhaNewsNetwork |  
Published : Feb 11, 2024, 01:46 AM IST
ಫೋಟೋ- 10ಜಿಬಿ5 ಮತ್ತು 10ಜಿಬಿ6 | Kannada Prabha

ಸಾರಾಂಶ

ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ತನಾರತಿ ಉತ್ಸವವು ಅಮಾವಾಸ್ಯೆ ಮಧ್ಯರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ತನಾರತಿ ಉತ್ಸವವು ಅಮಾವಾಸ್ಯೆ ಮಧ್ಯರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.

ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಹರಕೆ ತೀರಿಸುತ್ತಾರೆ.

ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಶ್ರೀಮಠದ ಪಾರಂಪರಿಕ ಉಡುಪು ಧರಿಸಿ ಉತ್ಸವದ ನೇತೃತ್ವ ವಹಿಸಿದ್ದರು. ಅವರ ಹಿಂದೆ ಸಾವಿರಾರು ಸದ್ಭಕ್ತರು ವಿಶೇಷವಾಗಿ ತಯಾರಿಸಿದ ಹಣತೆ ತಲೆಯ ಮೇಲೆ ಹೊತ್ತುಕೊಂಡು ಮಠದ ಸುತ್ತಲೂ ಐದು ಸುತ್ತು ಪ್ರದಕ್ಷಿಣೆ ಹಾಕಿದರು. ಪುರವಂತಿಕೆ, ಪೂರ್ಣಕುಂಭ, ಭಾಜಾ-ಭಜಂತ್ರಿ, ವೈದಿಕರ ವೇದಘೋಷಗಳ ಮಧ್ಯೆ ನಡೆದ ಈ ಉತ್ಸವ ಮಧ್ಯರಾತ್ರಿ ಪ್ರಾರಂಭವಾಗಿ ಬೆಳಗಿನ ಜಾವದ ವರೆಗೂ ನಡೆಯಿತು.

ಮಧ್ಯರಾತ್ರಿ ಸ್ನಾನಾದಿ ಪೂರೈಸಿಕೊಂಡು, ಗದ್ದುಗೆಗೆ ನಮಿಸಿ, ಗೋದಿಹಿಟ್ಟಿನಿಂದ ವಿಶೇಷ ಪ್ರಣತೆ ತಯಾರಿಸಿ ಅದರಲ್ಲಿ ಜ್ಯೋತಿ ಪ್ರಜ್ವಲಿಸಿ ಮಹಾಗುರುವಿಗೆ ಬೆಳಗಿ ಭಕ್ತರು ಧನ್ಯತೆ ಅನುಭವಿಸಿದರು.

ಭಕ್ತರು ಬೇಡಿಕೊಂಡ ಇಷ್ಟಾರ್ಥಗಳು ಈಡೇರಿದ ನಂತರ ತನಾರತಿ ಹರಕೆ ಸಲ್ಲಿಸುವ ಪರಂಪರೆ ಕಳೆದ ಮೂರು ಶತಮಾನಗಳಿಂದಲೂ ಶ್ರೀಮಠದಲ್ಲಿ ನಡೆಯುತ್ತಾ ಬಂದಿದ್ದು ನಾಲವಾರ ಶ್ರೀಮಠದ ಪಾರಂಪರಿಕ ಉತ್ಸವವಾಗಿದೆ. ತನಾರತಿ ಸಂದರ್ಭದಲ್ಲಿ ದೀಪಗಳ ಸಾಲು ನದಿಯ ರೀತಿ ಹರಿಯುವ ದೃಶ್ಯ ಕಣ್ಮನ ಸೆಳೆಯುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ