ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಸಾಲ ನೀಡಿ ಅವರ ಸ್ವಾವಲಂಬಿ ಬದುಕಿಗೆ ಸಹಕರಿಸಬೇಕೆಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಸ್ವಾನ್ನಲ್ಲಿ ಶುಕ್ರವಾರ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಮಹತ್ವಪೂರ್ಣ ಯೋಜನೆಯಾಗಿದ್ದು, ಕುಶಲಕರ್ಮಿಗಳನ್ನು ಬಲಪಡಿಸುವ ಹಾಗೂ ಅವರ ಕೌಶಲ್ಯ ಹೆಚ್ಚಿಸುವ ದೃಷ್ಟಿಯಿಂದ ತರಬೇತಿ ನೀಡ ಲಾಗುತ್ತಿದ್ದು ತರಬೇತಿ ಸಮಯದಲ್ಲಿ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಶಿಷ್ಯ ವೇತನ ನೀಡಿ ಅವರ ಏಳಿಗೆಗೆ ಸಹಕರಿಸುವುದು ಸರ್ಕಾರದ ಉದ್ದೇಶ ಎಂದರು.ಯಾವುದೇ ಕೆಲಸದಲ್ಲಿ ಕೌಶಲ್ಯವುಳ್ಳವರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡಿ ಕೇಂದ್ರ ಸರ್ಕಾರದ ನಿರ್ದೇಶನ ದಂತೆ ಬ್ಯಾಂಕ್ಗಳಿಂದ ಸಾಲ ಒದಗಿಸಿ ಅವರ ಸ್ವಾವಲಂಬಿ ಬದುಕಿಗೆ ಸಹಕರಿಸಬೇಕು. ಈಗಾಗಲೇ ಈ ಯೋಜನೆಯಡಿ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಶೀಘ್ರ ಪರಿಶೀಲಿಸಿ ಸಾಲ ನೀಡಬೇಕು ಎಂದ ಅವರು, ಯೋಜನೆ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಕ್ರಮವಹಿಸಿ ಎಂದರು.ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ತರಬೇತಿ ಕೇಂದ್ರಗಳನ್ನು ತೆರೆದು ಬಡಗಿ, ದೋಣಿ ತಯಾರಕರು, ಶಸ್ತ್ರ ತಯಾರಕರು, ಕುಂಬಾರ ವೃತ್ತಿ ಮಾಡುವವರು ಹಾಗೂ ವಿವಿಧ ಕಸುಬುಗಳಲ್ಲಿ ಕೌಶಲ್ಯವಿರುವ ಅರ್ಹ ಅಭ್ಯರ್ಥಿಗಳಿಗೆ ಊಟ ವಸತಿ ಹಾಗೂ 500 ರು. ಶಿಷ್ಯ ವೇತನದೊಂದಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ನಂತರ ಡಿಜಿಟಲ್ ಗುರುತಿನ ಚೀಟಿ ನೀಡಲಾಗುತ್ತದೆ. ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರ ಪರಿಶೀಲಿಸಿ ಕೊಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಸಿ. ಪ್ರಶಾಂತ್, ಕೈಗಾರಿಕೆ ಇಲಾಖೆ ಉಪ ನಿರ್ದೇಶಕ ರವಿಪ್ರಸಾದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್ ಹಾಜರಿದ್ದರು. 19 ಕೆಸಿಕೆಎಂ 5ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಸ್ವಾನ್ನಲ್ಲಿ ಶುಕ್ರವಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಕೀರ್ತನಾ ಇದ್ದರು.