ಕನ್ನಡಪ್ರಭ ವಾರ್ತೆ ಸಾಲಿಗ್ರಾಮ
ಮುಂಜಾನೆಯಿಂದಲೇ ಅರ್ಚಕ ವೃಂದ ಸುಪ್ರಭಾತ, ಹಾಲು-ಮೊಸರು, ಅರಿಶಿನ-ಕುಂಕುಮ, ಎಳನೀರು, ಪಂಚಾಮೃತಾಭಿಷೇಕ ಸೇರಿದಂತೆ ಪವಿತ್ರ ಕಾವೇರಿ ನೀರಿನಿಂದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಮೂಲ ಮೂರ್ತಿಗಳಿಗೆ ಜಲಾಭಿಷೇಕ ಮಾಡಿದರು. ನಂತರ ಹಲವು ಬಗೆಯ ಪುಷ್ಪಗಳ ತೋ ಮಾಲಾ ಅಲಂಕರಿಸಿ, ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು. ನಂತರ ಭಕ್ತಸಮೂಹ ಸಮ್ಮುಖದಲ್ಲಿ ದೇವರಿಗೆ ಮಹಾ ಮಂಗಳಾರತಿ ನೆರವೇರಿಸಿದ ಅರ್ಚಕರು ಬಳಿಕ ಬಂದಿದ್ದ ಭಕ್ತರಿಗೆ ತೀರ್ಥ, ಪ್ರಸಾದ ನೀಡಿದರು.
ಇನ್ನು ಶೃಂಗಾರಗೊಂಡಿದ್ದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿ ಮೂಲಕ ಭಕ್ತ ಸಮೂಹ ಗೋವಿಂದಾ ಗೋಪಾಲ ಎಂಬ ಮಂತ್ರ ಪಠಣದೊಂದಿಗೆ ದೇಗುಲದ ಸುತ್ತ ಪ್ರದಕ್ಷಿಣೆ ನಡೆಸಲಾಯಿತು.ಗ್ರಾಮಸ್ಥರು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯ ಭಕ್ತರು ಸಂಜೆವರೆಗೂ ತಂಡೋಪತಂಡವಾಗಿ ದೇಗುಲಕ್ಕೆ ಆಗಮಿಸಿ ಸುಡುವ ಬಿಸಿಲನ್ನು ಲೆಕ್ಕಿಸಿದೆ ಮಹಿಳೆಯರು, ಮಕ್ಕಳು, ವೃದ್ಧರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ಹಣ್ಣು, ಕಾಯಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಶ್ರೀರಾಮ ದೇಗುಲಕ್ಕೆ ಶ್ರೀರಾಮ, ಲಕ್ಷ್ಮಣ ಹಾಗೂ ಸೀತೆ ವೇಷ ಧರಿಸಿ ದೇಗುಲಕ್ಕೆ ಆಗಮಿಸಿದ ಪುಟಾಣಿ ಮಕ್ಕಳು ಎಲ್ಲರ ಗಮನಸೆಳೆಯಿತು. ಅಷ್ಟೇ ಅಲ್ಲದೆ ಕೆಲವರು ಸೆಲ್ಫಿ ಫೋಟೋ ಗೆ ಮುಗಿಬಿದ್ದ ದೃಶ್ಯ ಕಂಡು ಬಂತು.
ದೇಗುಲದ ಇಒ ರಘು, ಪಾರುಪತ್ತೆದಾರ ಯತಿರಾಜು, ಅರ್ಚಕರಾದ ನಾರಾಯಣ ಅಯ್ಯಂಗಾರ್, ವಾಸುದೇವನ್, ನವೀನ್ ಭಟ್ಟರು, ಭವಾನಿ ಪ್ರಸಾದ್, ಶೇಷಾದ್ರಿ, ಸಿಬ್ಬಂದಿಗಳಾದ ಶಿವಣ್ಣ, ತಿಮ್ಮಣ್ಣ, ಚಂದ್ರನಾಯಕ, ಹರೀಶ್, ಮಣಿ ಕಮಲ ಕೃಷ್ಣ ಇದ್ದರು.