ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ಸು
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರ, ಮಿಕ್ಕವರಿಗೆ ಚಿಕಿತ್ಸೆ
ಹುಣ್ಣಿಮೆಯಿದ್ದ ಕಾರಣ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಏರಿಕೆಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ದುರ್ಘಟನೆಯಲ್ಲಿ ಕೊಳ್ಳೇಗಾಲ ಪಟ್ಟಣದ ಪುಟ್ಟನಂಜಮ್ಮ (60), ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಮಹೇಶ್ (55) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡವರಲ್ಲಿ 25 ಜನರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಮಿಕ್ಕವರನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸೋಮವಾರ ಹುಣ್ಣಿಮೆಯಿದ್ದ ಕಾರಣ ಮಲೆ ಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪೂಜೆ, ಉತ್ಸವಗಳಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ಹುಣ್ಣಿಮೆ ಜನಸಂಖ್ಯೆ ಹೆಚ್ಚಿದ್ದ ಕಾರಣ ಮೈಸೂರಿಗೆ ಹೊರಟಿದ್ದ ಕೆಎ 57 ಎಫ್ 3964 ಬಸ್ಸಿನಲ್ಲಿ 67 ಜನರು ಪ್ರಯಾಣಿಸುತ್ತಿದ್ದರು. ಮಧುವನಹಳ್ಳಿ - ದೊಡ್ಡಿಂದುವಾಡಿ ಮಾರ್ಗದಲ್ಲಿ ಬಸ್ಸಿನ ಮುಂಭಾಗದ ಚಿಕ್ರ ಸಿಡಿದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಚಾಮರಾಜನಗರ ಎಸ್ಪಿ ಎಂ. ಮುತ್ತುರಾಜು, ಕೊಳ್ಳೇಗಾಲ ತಹಸೀಲ್ದಾರ್ ಬಸವರಾಜು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅಲ್ಲದೇ ಎಸ್ಪಿ ಅವರು ಆಸ್ಪತ್ರೆಗೂ ತೆರಳಿ ರೋಗಿಗಳನ್ನು ವಿಚಾರಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.