ಭಕ್ತಜನರ ಪರಾಕಿನೊಂದಿಗೆ ಕುಕ್ಕೆ ಚಂಪಾಷಷ್ಠಿ ಬ್ರಹ್ಮರಥೋತ್ಸವ

KannadaprabhaNewsNetwork | Published : Dec 19, 2023 1:45 AM

ಸಾರಾಂಶ

ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್,ಜಾಗಟೆ,ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ ೭.೩೩ರ ಧನುರ್ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಮಂಗಳಾರತಿ ನೆರವೇರಿತು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನ ಕಾರ್ತಿಕ ಶುದ್ಧ ಷಷ್ಠಿಯ ಸೋಮವಾರ ಮುಂಜಾನೆ ಸಹಸ್ರಾರು ಭಕ್ತಜನರ ಸಮ್ಮುಖದಲ್ಲಿ ಭಕ್ತಿ ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ಸಂಪನ್ನವಾಯಿತು.

ಬೆಳಗ್ಗೆ ೭.೩೩ರ ಧನುರ್‌ಲಗ್ನ ಸುಮುಹೂರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಉತ್ಸವದ ವಿವಿಧ ವೈಧಿಕ ವಿದಿವಿಧಾನ ನೆರವೇರಿಸಿದರು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಬ್ರಹ್ಮರಥೋತ್ಸವ ಸೇವೆಯನ್ನು 148 ಭಕ್ತರು ಸಲ್ಲಿಸಿದರು. ಬ್ರಹ್ಮರಥೋತ್ಸವ ಸೇವೆ ಸಲ್ಲಿಸಿದ ಭಕ್ತರಿಗೆ ರಥ ಎಳೆಯಲು ಅನುಕೂಲವಾಗುವಂತೆ ವಿಶೇಷ ಪಾಸ್ ನೀಡಲಾಗಿತ್ತು.

ಮೊದಲು ದೇವಳದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ನಂತರ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್,ಜಾಗಟೆ,ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ ೭.೩೩ರ ಧನುರ್ ಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಬ್ರಹ್ಮರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಮಂಗಳಾರತಿ ನೆರವೇರಿತು.

ಪೂಜೆಯ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಶ್ರೀದೇವರಿಗೆ ಸುವರ್ಣವೃಷ್ಟಿ ನೆರವೇರಿಸಿದರು. ಬಳಿಕ ಭಕ್ತಾದಿಗಳಿಗೆ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ರಥದಿಂದ ಭಕ್ತರತ್ತ ಎಸೆದರು. ಭಕ್ತಾದಿಗಳು ನಾಣ್ಯ, ಕಾಳು ಮೆಣಸು, ಸಾಸಿವೆಗಳನ್ನು ರಥಕ್ಕೆ ಎಸೆದರು. ಬಳಿಕ ಪ್ರಥಮವಾಗಿ ಪಂಚಮಿ ರಥೋತ್ಸವ ನೆರವೇರಿತು. ನಂತರ ಮಹಾರಥೋತ್ಸವ ನಡೆಯಿತು.

ದ್ವಾದಶಿ ಮಂಟಪದಲ್ಲಿ ಪೂಜೆ: ಬಳಿಕ ದೇವಳದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ಮಯೂರ ವಾಹನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರ ದೇವರಿಗೆ ಪೂಜೆ ನಡೆಯಿತು. ದೇವರು ಗರ್ಭಗುಡಿಗೆ ಪ್ರವೇಶಿಸಿದ ನಂತರ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಮೂಲಪ್ರಸಾದ ವಿತರಿಸಿದರು.ಬ್ರಹ್ಮರಥೋತ್ಸವ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದ.ಕ. ಪೊಲೀಸ್‌ ವರಿಷ್ಠಾಧಿಕಾರಿ ಋಷ್ಯಂತ್, ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಗಿರೀಶ್‌ನಂದನ್, ದಾನಿಗಳಲ್ಲಿ ಓರ್ವರಾದ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸೇರಿದಂತೆ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೇರಿದಂತೆ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಬೀದಿ ಉರುಳು ಸೇವೆ: ಕುಮಾರಧಾರ ತೀರ್ಥ ಸ್ನಾನದಿಂದ ದೇವಳದ ತನಕ ಸುಮಾರು ೨ಕಿ.ಮೀ ದೂರದವರೆಗೆ ಊರುಳುತ್ತಾ ಸಾಗುವ ಅತ್ಯಂತ ಕಠಿಣವಾದ ಹರಕೆ ಸೇವೆಯಾದ ಬೀದಿ ಉರುಳು ಸೇವೆಯು ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು. ಹೆಚ್ಚಿನ ಸಂಖ್ಯೆಯ ಭಕ್ತರು ಈ ಸೇವೆ ನೆರವೇರಿಸಿದರು.

ಚಂಪಾಷಷ್ಠಿ ಮಹೋತ್ಸವದ ಷಷ್ಠಿಯ ದಿನವಾದ ಸೋಮವಾರ ದೇವಳದ ಹೊರಾಂಗಣದಲ್ಲಿ ಎಡೆಸ್ನಾನ ಸೇವೆ ನೆರವೇರಿತು. ಸುಮಾರು ೧೯೪ ಭಕ್ತರಿಂದ ಎಡೆಸ್ನಾನ ಸೇವೆ ನೆರವೇರಿತು. ಭಕ್ತರು ಹೊರಾಂಗಣದಲ್ಲಿ ಎಲೆಯ ಮೇಲೆ ಬಡಿಸಿದ ದೇವರ ನೈವೇಧ್ಯವನ್ನು ಗೋವುಗಳು ತಿಂದ ಬಳಿಕ ಉರುಳು ಸೇವೆ ನೆರವೇರಿಸಿದರು.

ಚಂಪಾಷಷ್ಠಿಯ ದಿನ ನಾಗಾರಾಧನೆಯ ಪ್ರಧಾನ ಕ್ಷೇತ್ರ ಕುಕ್ಕೆಗೆ ಭಕ್ತ ಸಾಗರವೇ ಹರಿದು ಬಂದಿತ್ತು.ಬ್ರಹ್ಮರಥೋತ್ಸವದ ಸಂದರ್ಭ ರಥಬೀದಿಯ ಇಕ್ಕೆಲದಲ್ಲಿ ಮತ್ತು ರಥೋತ್ಸವದ ಬಳಿಕ ರಥಬೀದಿ ತುಂಬೆಲ್ಲ ಭಕ್ತ ಸಂದೋಹವೇ ಕಂಡು ಬಂದಿತ್ತು. ಆದಿಸುಬ್ರಹ್ಮಣ್ಯ, ಶ್ರೀ ದೇವಳದ ಹೊರಾಂಗಣ, ಒಳಾಂಗಣದಲ್ಲಿ ಭಕ್ತ ಸಾಗರವೇ ಕಂಡು ಬಂದಿತ್ತು.ಷಷ್ಠಿಯ ಸುದಿನ ಷಣ್ಮುಖ ಪ್ರಸಾದ ಬೋಜನ ಶಾಲೆ ಮತ್ತು ಆದಿಸುಬ್ರಹ್ಮಣ್ಯ ಬೋಜನ ಶಾಲೆಯಲ್ಲಿ ಬೆಳಗ್ಗೆ ೧೦.೩೦ರಿಂದ ಸಂಜೆ ೫ ಗಂಟೆಯ ತನಕ ನಿರಂತರವಾಗಿ ಅನ್ನಪ್ರಸಾದವನ್ನು ಸಹಸ್ರಾರು ಭಕ್ತರು ಸ್ವೀಕರಿಸಿದರು.

ಇಂದು ಅವಭೃತೋತ್ಸವ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನ ಬುಧವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ದೇವರ ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿರುವುದು.ಈ ಮೊದಲು ಓಕುಳಿ ಪೂಜೆ, ಓಕುಳಿ ಸಂಪ್ರೋಕ್ಷಣೆಯ ಬಳಿ ಶ್ರೀದೇವರು ಅವಭೃತಕ್ಕೆ ತೆರಳಲಿದ್ದಾರೆ.

Share this article