ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ
ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಆದರೆ ಇದೀಗ ನೂತನ ಯೋಜನೆ ಮೂಲಕ ಪ್ರತಿದಿನ ಬೇರೆ ಬೇರೆ ತೆರನಾದ ಪಾಯಸಗಳನ್ನು ಭಕ್ತರಿಗೆ ಉಣಬಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ.
ಕಡ್ಲೆ ಬೇಳೆ, ಹೆಸರು ಬೇಳೆ, ಕಡ್ಳೆ ಬೇಳೆ ಸಾಬಕ್ಕಿ, ಗೋಧಿ ಕಡಿ, ಹಾಲು ಪಾಯಸ, ಅಕ್ಕಿ ಪಾಯಸ, ಶ್ಯಾವಿಗೆ ಪಾಯಸ, ರವೆ ಪಾಯಸ ಮತ್ತು ಸಿರಿಧಾನ್ಯ ಸೇರಿದಂತೆ ೧೦ ಬಗೆಯ ಪಾಯಸಗಳನ್ನು ತಯಾರಿಸಿ ಭಕ್ತರಿಗೆ ವಿತರಿಸಲಾಗುತ್ತದೆ. ಅತ್ಯುತ್ತಮವಾದ ೧೫ ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಉಪಯೋಗಿಸಲು ಯೋಜನೆ ಮಾಡಿದ್ದಾರೆ.ಪ್ರತಿನಿತ್ಯ ಭಕ್ತರಿಗೆ ಅನಾದಿ ಕಾಲದಿಂದ ಪ್ರಸಾದದಲ್ಲಿ ವಿತರಿಸಲಾಗುತ್ತಿರುವ ಸಾಂಪ್ರದಾಯಿಕ ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ವಿತರಣೆಯಾಗುತ್ತದೆ. ಜಾತ್ರೆ ಮತ್ತು ಹೊಸ್ತಾರೋಗಣೆಯ ದಿನಗಳಲ್ಲಿ ಭಕ್ಷ್ಯಗಳ ಸಂಖ್ಯೆ ಅಧಿಕವಿರುತ್ತದೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.
ದೇವಳವು ತನ್ನ ಆಡಳಿತದಲ್ಲಿ ಎರಡು ಶಿಕ್ಷಣ ಸಂಸ್ಥೆಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ.ಈ ವಿದ್ಯಾ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಿನ ನಿತ್ಯ ಶ್ರೀ ದೇವಳದಿಂದ ಪ್ರಸಾದ ಭೋಜನ ವಿತರಣೆಯಾಗುತ್ತಿದೆ. ಕ್ಷೇತ್ರದಲ್ಲಿನ ಇತರ ಶಾಲೆಗಳಿಗೆ ಕೂಡಾ ಶ್ರೀ ದೇವಳದಿಂದ ಬೋಜನ ವ್ಯವಸ್ಥೆ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ವ್ಯಾಸಂಗ ಮಾಡುವ ಸುಮಾರು ೩,೩೦೦ ಮಂದಿಗೆ ಭೋಜನ ಪ್ರಸಾದ ವಿತರಿಸಲಾಗುತ್ತಿದೆ.
ದೇವಳದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆ ಮಾಡಲಾಗುವುದು.
..............
-ಅರವಿಂದ ಅಯ್ಯಪ್ಪ ಸುತಗುಂಡಿ, ಕಾರ್ಯನಿರ್ವಹಣಾಧಿಕಾರಿ.
ಪ್ರತಿದಿನ ಕಾಲೇಜಿಗೆ ಊಟ ಬರುತ್ತಿರುವುದರಿಂದ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಬೆಳವಣಿಗೆಗೆ ಪೂರಕವಾಗಿದೆ. ಹಳ್ಳಿಗಳಿಂದ ಮತ್ತು ದೂರದೂರುಗಳಿಂದ ಬರುವಂತಹ ವಿದ್ಯಾರ್ಥಿಗಳು ಬೆಳಗ್ಗೆ ಬೇಗನೆ ಬಿಟ್ಟು ಆಹಾರ ಸೇವಿಸದೆ ಬರುತ್ತಾರೆ.ಆದುದರಿಂದ ಮಧ್ಯಾಹ್ನ ಉತ್ತಮವಾದ ಭೋಜನ ಸಿಗುವ ಕಾರಣ ಮಕ್ಕಳ ಆರೋಗ್ಯ ವೃದ್ಧಿಯಾಗುತ್ತಿದೆ.