ಆಗಸ್ಟ್‌ನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ

KannadaprabhaNewsNetwork | Updated : Jul 08 2024, 12:50 PM IST

ಸಾರಾಂಶ

ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಾ ಬರುತ್ತಿದ್ದು, ಈ ಸಲ ರಾಜಧಾನಿ ಬೆಂಗಳೂರಿನಲ್ಲಿ ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.

 ಬೆಂಗಳೂರು  :  ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಾ ಬರುತ್ತಿದ್ದು, ಈ ಸಲ ರಾಜಧಾನಿ ಬೆಂಗಳೂರಿನಲ್ಲಿ ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.ಕಾರ್ಯಕ್ರಮದ ದಿನಾಂಕ, ಸ್ಥಳ ನಿಗದಿ ಸೇರಿದಂತೆ ಪೂರ್ವ ತಯಾರಿ ಕುರಿತ ಚರ್ಚೆಗೆ ನಗರದ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದ ಬಳಿಕ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್‌ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಗಳನ್ನು ನೀಡಿದರು.

ನಮ್ಮ ಪ್ರತಿಷ್ಠಾನದಿಂದ ನಡೆಯುವ ಈ ಬಾರಿಯ ಕುಂದಾಪುರ ಕನ್ನಡ ದಿನಾಚರಣೆಯನ್ನು ನಗರದ ಅರಮನೆ ಮೈದಾನದ ವೈಟ್‌ಪೆಟಲ್ಸ್‌ನಲ್ಲಿ ಮುಂದಿನ ಆ.17 ಮತ್ತು 18ರಂದು ಎರಡು ದಿನ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ. ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ನಡೆಸಲಾಗಿತ್ತು. ಆದರೆ ವರ್ಷದಿಂದ ವರ್ಷಕ್ಕೆ ಜನಸ್ತೋಮ ಹೆಚ್ಚುತ್ತಿರುವುದರಿಂದ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕ ನಿರ್ದೇಶಕ ಆರ್.ಉಪೇಂದ್ರ ಶೆಟ್ಟಿ, ಹೋಟೆಲೋದ್ಯಮಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ಬೃಹತ್ ಮೆರವಣಿಗೆ:

ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್‌’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನ, ‘ನುಡಿ ಚಾವಡಿ’ ಕಾರ್ಯಕ್ರಮದ ಮೂಲಕ ಉದ್ಘಾಟನೆ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೆ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಮಾತ್ರವಲ್ಲ, ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕರು ಸೇರಿ ಹಲವು ತಾರೆಯರು ಭಾಗಿಯಾಗಲಿದ್ದಾರೆ ಎಂದು ದೀಪಕ್ ಶೆಟ್ಟಿ ಹೇಳಿದ್ದಾರೆ.

Share this article