ಹೊನ್ನಾಳಿ: ಮಧ್ಯ ಕರ್ನಾಟಕದಲ್ಲಿಯೇ ಐತಿಹಾಸಿಕ ಹಿನ್ನೆಲೆ ಇರುವ ಸಹಸ್ರಾರು ಭಕ್ತರನ್ನು ಹೊಂದಿರುವ ತಾಲೂಕಿನ ಕುಂದೂರು ಗ್ರಾಮದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.ಮುಜರಾಯಿಗೆ ಸೇರಿರುವ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸನಾತನ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳ ಅನುಸಾರ ಅದ್ಧೂರಿಯಿಂದ ನಡೆಯಿತು.
ಸಾವಿರಾರು ಭಕ್ತರು ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಂಡು ಬಾಳೆ ಹಣ್ಣುಗಳನ್ನು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು.
ನೂರಾರು ಭಕ್ತರು ಗರ್ಭಗುಡಿಯ ಮುಂಭಾಗದಲ್ಲಿ ಉರುಳುಸೇವೆ ಮಾಡಿದರು.ಬ್ರಹ್ಮರಥೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಮಾರುತಿ ಯುವಕ ಸಂಘದ ದಾಸೋಹದ ಸಮಿತಿಯಿಂದ ಪ್ರಸಾದ ವ್ಯವಸ್ಥೆ ಮಾಡಿದರು. ಬೆಳಗ್ಗೆಯಿಂದಲೇ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ಮಜ್ಜಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಗ್ರಾಮದ ಪ್ರತಿ ಮನೆಗಳನ್ನು ಹಸಿರು ತೋರಣಗಳಿಂದ ಸಿಂಗರಿಸಿ ವಿವಿಧ ಬಗೆಯ ರಂಗೋಲಿಗಳನ್ನು ಬಿಡಿಸಲಾಗಿತ್ತು.
ಬ್ರಹ್ಮರಥೋತ್ಸವಕ್ಕೆ ಅಸಂಖ್ಯಾತ ಭಕ್ತರು ಬಂದಿದ್ದರಿಂದ ಯಾವುದೇ ಅವಘಡ ಸಂಭವಿಸಬಾರದೆಂದು ಪೊಲಿಸ್ ಇನ್ಸ್ಪೆಕ್ಟರ್ ಮುದ್ದುರಾಜು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.