ಕುಶಾಲನಗರ: ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕುಶಾಲನಗರ ಘಟಕ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಅಗ್ನಿಶಾಮಕ ಠಾಣಾಧಿಕಾರಿ ಎನ್.ಎ.ರಂಜಿತ್ ಚಾಲನೆ ನೀಡಿದರು.ಅಗ್ನಿ ಅನಾಹುತಗಳ ವಿಧಗಳು, ಅವುಗಳನ್ನು ನಿಯಂತ್ರಿಸುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಠಾಣೆಯ ಸಹಾಯಕ ಅಧಿಕಾರಿ ಲತೇಶ್ ಕುಮಾರ್ ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಉಪನ್ಯಾಸಕ ಕೆ ಆರ್ ಮಂಜೇಶ್ ನಿರೂಪಿಸಿದರು. ಸಂಘದ ನಿರ್ದೇಶಕ ಕುಡೆಕಲ್ ಗಣೇಶ್ ಪ್ರಾರ್ಥಿಸಿದರು. ಸಹ ಕಾರ್ಯದರ್ಶಿ ಕೆ ಕೆ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಭೋಜಣ್ಣ ರೆಡ್ಡಿ ವಂದಿಸಿದರು.ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಪತ್ರಕರ್ತರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳಾದ ಕೆ.ಜೆ.ಶಿವರಾಜ್, ಕುಡೆಕಲ್ ಗಣೇಶ್, ಎಚ್ ವಿ ವಿನೋದ್, ಜಯ ಪ್ರಕಾಶ್ ಮತ್ತಿತರರಿದ್ದರು.
ನಂತರ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಬೆಂಕಿ ಅವಘಡಗಳು ಹಾಗೂ ನಂದಿಸುವ ಕುರಿತ ಪ್ರಾತ್ಯಕ್ಷಿಕೆ ನಡೆಯಿತು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಯ ಸಿಬ್ಬಂದಿ ತಂಡ ತುರ್ತು ಕಾರ್ಯಾಚರಣೆ ಕುರಿತ ವಿವಿಧ ರೀತಿಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.