ಕನ್ನಡಪ್ರಭ ವಾರ್ತೆ ಕುಶಾಲನಗರ
ಬಿಜೆಪಿಯ ಷಡ್ಯಂತ್ರ ಮತ್ತು ಸುಳ್ಳು ಹೇಳಿಕೆಗಳ ಮೂಲಕ ಮಾಡುತ್ತಿರುವ ರಾಜಕೀಯದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಸೇರಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.ಅನಾವಶ್ಯಕವಾಗಿ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಜಿಲ್ಲೆಯ ಇಬ್ಬರು ಶಾಸಕರು ಹೆಸರುಗಳನ್ನು ದುರ್ಬಳಕೆ ಮಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಕುಶಾಲನಗರ ಕಾರು ನಿಲ್ದಾಣದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ವಕ್ತಾರರಾದ ಲಕ್ಷ್ಮಣ್ ಅವರು ಮಾತನಾಡಿದರು.
ಬಿಜೆಪಿ ನಾಯಕರು ರಕ್ತದ ಮೇಲೆ ಅಧಿಕಾರ ಮಾಡುತ್ತಿದ್ದಾರೆ ವಿನಯ್ ಸೋಮಯ್ಯ ಸಾವಿನ ವಿಷಯ ಮುಂದಿಟ್ಟುಕೊಂಡು ಜಿಲ್ಲೆಯ ಇಬ್ಬರು ಶಾಸಕರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮತ ಧ್ರುವೀಕರಣ ಬಿಜೆಪಿಯ ಗುರಿಯಾಗಿದ್ದು, ಸುಳ್ಳು ವದಂತಿಗಳ ಮೂಲಕ ಜನರ ದಾರಿ ತಪ್ಪಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಪಿ ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮದ ಆಧಾರದಲ್ಲಿ ಬಿಜೆಪಿ ಅಧಿಕಾರದ ರಾಜಕೀಯ ಮಾಡುತ್ತಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಜಿಲ್ಲೆಯ ಇಬ್ಬರು ಶಾಸಕರ ಮೇಲೆ ಅನಾವಶ್ಯಕ ಸುಳ್ಳು ವದಂತಿ ಹಬ್ಬುತ್ತಿದ್ದಾರೆ ಈ ಬಗ್ಗೆ ಪ್ರತಿಯೊಬ್ಬರು ಜಾಗೃತರಾಗಬೇಕಾಗಿದೆ ಎಂದರು.
ಕಾಂಗ್ರೆಸ್ ಪ್ರಮುಖರಾದ ನಾಪಂಡ ಮುತ್ತಪ್ಪ ಮತ್ತು ಕೆ ಕೆ ಮಂಜುನಾಥ್ ಕುಮಾರ್ ಅವರು ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ತಾಲೂಕು ವ್ಯಾಪ್ತಿಯ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಇದ್ದರು.