ಕುಶಾಲನಗರ: ನೀಟ್ ಪರೀಕ್ಷೆ ಅಕ್ರಮ ವಿರುದ್ದ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಂಧನವನ್ನು ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಯಿತು.
ಬಂಧನಕ್ಕೊಳಪಡಿಸಿರುವ ವಿದ್ಯಾರ್ಥಿಗಳ ಬಿಡುಗಡೆಗೆ ಆಗ್ರಹಿಸಿ ಮತ್ತು ಅವರ ಮೇಲೆ ಹೂಡಿರುವ ಮೊಕದ್ದಮೆಗಳನ್ನು ಕೈಬಿಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಲಾಯಿತು.
ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ಪಟ್ಟಣದ ರಥಬೀದಿ ಮೂಲಕ ಹಳೆ ಮಾರುಕಟ್ಟೆ ರಸ್ತೆ, ಟೌನ್ ಕಾಲೊನಿ ಮೂಲಕ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ದೇಶಾದ್ಯಂತ ಬಿಜೆಪಿ ಸರಕಾರದ ವಿರುದ್ದ ಜನತೆ ಆಕ್ರೋಶಭರಿತರಾಗಿದ್ದಾರೆ. ಹಲವು ಹಗರಣಗಳಿಂದ ರೋಸಿ ಹೋಗಿದ್ದಾರೆ ಎಂದರು.ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಮೋದಿ ಸರಕಾರವನ್ನು ಪ್ರಶ್ನಿಸುವವರ, ಹೋರಾಟ, ಚಳವಳಿಗಳನ್ನು ಹಮ್ಮಿಕೊಳ್ಳುವವರಿಗೆ ಒಂದೊಂದು ಹಣೆಪಟ್ಟಿ ಕಟ್ಟಿ ಅವರ ಸದ್ದಡಗಿಸುವ ದಮನಕಾರಿ ನೀತಿಯನ್ನು ಬಿಜೆಪಿ ಸರಕಾರ ಅನುಸರಿಸುತ್ತಿದೆ ಎಂದರು.
ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಎನ್ಎಸ್ ಯುಐನ ಬಸವರಾಜು ಮಾತನಾಡಿದರು.