ಕುಶಾಲನಗರ: ಆನೆಗಳ ಬಗ್ಗೆ ಸಮಗ್ರ ಮಾಹಿತಿಯೊಂದಿಗೆ ಅವುಗಳ ಸಂರಕ್ಷಣೆ, ಮಾನವ-ಆನೆ ಸಂಘರ್ಷ ನಿಯಂತ್ರಣ, ಜನರಲ್ಲಿ ಅರಿವು ಜಾಗೃತಿ ಮೂಡಿಸಲು ಪ್ರತಿ ವರ್ಷ ಆ. 12ರಂದು ವಿಶ್ವ ವ್ಯಾಪಿಯಾಗಿ ಆನೆ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರಪೇಟೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್ ತಿಳಿಸಿದರು. ಕುಶಾಲನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ವಿಶ್ವ ಆನೆ ದಿನದ ಅಂಗವಾಗಿ ನಡೆದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ಕಾರ್ಯಕ್ರಮದ ಬಗ್ಗೆ ಮಾತನಾಡಿ, ವಿಶ್ವ ಆನೆ ದಿನದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅದರನ್ವಯ ಸೋಮವಾರಪೇಟೆ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಖಾಸಗಿ ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.12ರಂದು ಕುಶಾಲನಗರದ ಕಾವೇರಿ ನಿಸರ್ಗಧಾಮ ಪ್ರದೇಶದಲ್ಲಿ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಜಾಗೃತಿ ಜಾಥಾ ನಡೆಸಲಾಗುವುದು ಎಂದರು. ನಂತರ ಕಾವೇರಿ ನಿಸರ್ಗಧಾಮ ಆವರಣದಲ್ಲಿ ಆನೆಗಳ ಬಗ್ಗೆ ಸಮಗ್ರ ಮಾಹಿತಿ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಸಹಾಯಕ ವಲಯ ಅರಣ್ಯಾಧಿಕಾರಿಗಳಾದ ವೆಂಕಟೇಶ್, ಉಮಾಶಂಕರ್, ಶಾಲಾ ಮುಖ್ಯೋಪಾಧ್ಯಾಯ ಸಣ್ಣ ಸ್ವಾಮಿ, ಶಾಲಾ ಶಿಕ್ಷಕರಾದ ಭವ್ಯ ಮತ್ತು ಶಶಿಕುಮಾರ್ ಇದ್ದರು.