ಕಳೆದ 3 ದಿನಗಳಿಂದ ಮಳೆ ಸುರಿಯತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಕುಶಾಲನಗರ: ಕಳೆದ 3 ದಿನಗಳಿಂದ ಮಳೆ ಸುರಿಯತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ಸೇತುವೆಯ ಕೆಳ ಭಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ಸುಮಾರು ಐದು ಅಡಿಗಳಷ್ಟು ಏರಿಕೆ ಗೋಚರಿಸಿದೆ. ಭಾಗಮಂಡಲ ತಲ ಕಾವೇರಿ ವ್ಯಾಪ್ತಿಯಲ್ಲಿ ಗುರುವಾರ 33.2 ಮಿಲಿ ಮೀಟರ್ ಪ್ರಮಾಣದ ಮಳೆಯಾಗಿದೆ.ಕಳೆದ ಬಾರಿ ಇದೇ ಅವಧಿಯಲ್ಲಿ ಕುಶಾಲನಗರ ಕಾವೇರಿ ಸೇತುವೆ ಕೆಳ ಭಾಗ 23 ಅಡಿಗಳಷ್ಟು ಎತ್ತರದಲ್ಲಿ ನೀರು ಹರಿಯುವುದರೊಂದಿಗೆ ನದಿ ತಟದ ವ್ಯಾಪ್ತಿಯ ನಾಗರಿಕರು ಆತಂಕಕ್ಕೊಳಗಾಗಿದ್ದ ಪರಿಸ್ಥಿತಿ ಎದುರಾಗಿರುವುದನ್ನು ಸ್ಮರಿಸಬಹುದು.
ಕುಶಾಲನಗರ ತಾಲೂಕಿನ ವ್ಯಾಪ್ತಿಯಲ್ಲಿ ಸರಾಸರಿ ಈ ಸಾಲಿನಲ್ಲಿ ಇದುವರೆಗೆ ಒಟ್ಟು 205.69 ಮಿಲಿ ಮೀಟರ್ ಪ್ರಮಾಣದ ಮಳೆ ಸುರಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 796.54 ಮಿಲಿ ಮೀಟರ್ ಪ್ರಮಾಣದ ಮಳೆ ಆಗಿತ್ತು. ಹಾರಂಗಿ ಜಲಾಶಯದಲ್ಲಿ ಶುಕ್ರವಾರ ಸಂಜೆ ವೇಳೆಗೆ ಜಲಾಶಯಕ್ಕೆ 1113 ಕ್ಯೂಸೆಕ್ಸ್ ಪ್ರಮಾಣದ ನೀರಿನ ಒಳ ಹರಿವು ಬರುತ್ತಿದ್ದು ಜಲಾಶಯದಲ್ಲಿ ಪ್ರಸಕ್ತ 3.3 ಟಿಎಂಸಿ ಪ್ರಮಾಣದ ನೀರಿನ ಸಂಗ್ರಹ ಇದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2859 ಅಡಿಗಳಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2853 ಅಡಿಗಳಷ್ಟು ನೀರಿನ ಸಂಗ್ರಹ ಪ್ರಮಾಣ ಕಂಡುಬಂದಿತ್ತು. ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.