ಬರಪೀಡಿತ ಪಟ್ಟಿಯಿಂದ ಕುಷ್ಟಗಿ ಔಟ್!

KannadaprabhaNewsNetwork |  
Published : Aug 28, 2026, 02:30 AM IST
ಪೋಟೊ27ಕೆಎಸಟಿ2ದೊಡ್ಡನಗೌಡ ಪಾಟೀಲಅಮರೇಗೌಡ ಪಾಟೀಲ ಬಯ್ಯಾಪೂರ | Kannada Prabha

ಸಾರಾಂಶ

ತಾಲೂಕಿನ ಹಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರ ಕೃಷಿ ಚಟುವಟಿಕೆಗಳು ತೊಂದರೆಗೀಡಾಗಿವೆ.

ಪರಶಿವಮೂರ್ತಿ ಮಾಟಲದಿನ್ನಿ ಕುಷ್ಟಗಿ

ರಾಜ್ಯದಲ್ಲಿ ಬರದ ಛಾಯೆ ಆವರಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕಟಿಸಿರುವ 101 ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕುಷ್ಟಗಿ ತಾಲೂಕು ಹೊರಗುಳಿದಿರುವುದು ರೈತರು ಹಾಗೂ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ, ಕುಕನೂರು ಹಾಗೂ ಕನಕಗಿರಿ ತಾಲೂಕುಗಳು ಬರಪೀಡಿತ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಆದರೆ ಮಳೆ ಕೊರತೆ, ಬೆಳೆ ನಷ್ಟ ಹಾಗೂ ಕೃಷಿ ಚಟುವಟಿಕೆಗಳ ಮೇಲಿನ ಪ್ರತಿಕೂಲ ಪರಿಣಾಮದಿಂದ ಸಂಕಷ್ಟ ಎದುರಿಸುತ್ತಿರುವ ಕುಷ್ಟಗಿಗೆ ಪಟ್ಟಿಯಲ್ಲಿ ಸ್ಥಾನ ಸಿಗದಿರುವುದು ಇದೀಗ ಕುಷ್ಟಗಿಗೆ ಬರ ಇಲ್ಲವೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ತಾಲೂಕಿನ ಹಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ರೈತರ ಕೃಷಿ ಚಟುವಟಿಕೆಗಳು ತೊಂದರೆಗೀಡಾಗಿವೆ. ಬೆಳೆಗಳ ಇಳುವರಿ ಕುಸಿತ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಹಾಗೂ ಕುಡಿಯುವ ನೀರಿನ ಆತಂಕವೂ ಎದುರಾಗಿದೆ. ಇಂತಹ ವಾಸ್ತವ ಪರಿಸ್ಥಿತಿಯ ನಡುವೆಯೂ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕುಷ್ಟಗಿಯನ್ನು ಹೊರಗಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬರಪೀಡಿತ ತಾಲೂಕುಗಳಿಗೆ ಸರ್ಕಾರದಿಂದ ದೊರೆಯುವ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ವಿವಿಧ ಪರಿಹಾರ ಕ್ರಮಗಳಿಂದ ಕುಷ್ಟಗಿ ವಂಚಿತವಾಗುವ ಆತಂಕ ರೈತರಲ್ಲಿ ಮೂಡಿದೆ.

ಈ ಹಿನ್ನೆಲೆ ತಾಲೂಕಿನಲ್ಲಿ ಮಳೆ ಪ್ರಮಾಣ, ಬೆಳೆ ಹಾನಿ ಹಾಗೂ ಕೃಷಿ ಪರಿಸ್ಥಿತಿಯ ಸಮಗ್ರ ವಾಸ್ತವಾಂಶ ಪರಿಗಣಿಸಿ ಕುಷ್ಟಗಿಯನ್ನೂ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂಬ ಒತ್ತಾಯ ರೈತರಿಂದ ಕೇಳಿ ಬಂದಿದೆ.

ಕುಷ್ಟಗಿ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಬೆಳೆಗಳು ಹಾಳಾಗಿವೆ. ಈ ವಾಸ್ತವಾಂಶ ಅಧಿಕಾರಿಗಳು ಹಾಗೂ ಸಚಿವರಿಗೂ ತಿಳಿದಿದೆ. ಹೀಗಿದ್ದರೂ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿರುವುದು ಸರಿಯಲ್ಲ. ಕೂಡಲೇ ಕುಷ್ಟಗಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ರೈತರನ್ನು ಸಂಘಟಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಪರ ಹೋರಾಟ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಅಡವಿಭಾವಿ ಆಗ್ರಹಿಸಿದ್ದಾರೆ.

ರಾಜ್ಯದ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕುಷ್ಟಗಿ ಇರದಿರುವುದು ವಿಚಿತ್ರವಾಗಿದೆ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕುಷ್ಟಗಿಯನ್ನು ಸೇರ್ಪಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದ್ದಾರೆ.

ಕುಷ್ಟಗಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕಾಗಿತ್ತು. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಸಚಿವರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡ ಅಂತಾಪುರದಲ್ಲಿ ಮತ್ತೆರಡು ಜಿನ ಶಾಸನಗಳ ಅನ್ವೇಷಣೆ
ಓದುಗರನ್ನು ಗೆಲ್ಲುವಂತಹ ಸಾಹಿತ್ಯ ಸೃಷ್ಟಿಯಾಗಲಿ: ಸತೀಶ ಕುಲಕರ್ಣಿ