ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಇದೇ ತಿಂಗಳ 11ರಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದಲ್ಲಿ ಕುಸುಮ್- ಸಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.ಕುಸುಮ್- ಸಿ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮದ ಆಯೋಜನೆಯ ಭಾಗವಾಗಿ ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ವಿದ್ಯುತ್ಗೆ ₹18 ಸಾವಿರ ಕೋಟಿ:ರಾಜ್ಯ ಸರ್ಕಾರ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರಸ್ತುತ 05 ಗಂಟೆಗಳ ವಿದ್ಯುತ್ ಪೂರೈಕೆ ಮಾಡುತ್ತಿದೆ. ರಾಜ್ಯದಲ್ಲಿನ ವಿದ್ಯುತ್ ಕಂಪನಿಗಳಿಗೆ 18 ಸಾವಿರ ಕೋಟಿ ರುಪಾಯಿಗಳಿಗೂ ಹೆಚ್ಚು ಹಣವನ್ನು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್ ನ ಭಾಗವಾಗಿ ಸಬ್ಸಿಡಿಯಾಗಿ ಪಾವತಿಸುತ್ತಿದೆ. ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ನ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
11ಕ್ಕೆ ಕುಸುಮ್-ಸಿಗೆ ಸಿಎಂ ಚಾಲನೆ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ರೈತರ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಕುಸುಮ್-ಬಿ ಯೋಜನೆಗೆ ಚಾಲನೆ ನೀಡಿದ್ದು, ಈಗ ಕುಸುಮ್-ಸಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಇದೇ ತಿಂಗಳ 11ರಂದು ರಾಜ್ಯ ಮಟ್ಟದ ಕುಸುಮ್-ಸಿ ಕಾರ್ಯಕ್ರಮಕ್ಕೆ ತೊಂಡೇಬಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು
ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕುಸುಮ್- ಸಿ ಮೂಲಕ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಇಲ್ಲಿಂದಲೇ ಸ್ಥಳೀಯ ಸುತ್ತಮುತ್ತಲ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಅನುಕೂಲವಾಗಲಿದೆ. ಈ ವರ್ಷ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್ ನಿರಂತರವಾಗಿ ಸರಬರಾಜಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಬೇಡಿಕೆಗೆ ತಕ್ಕಂತೆ ಹಾಗೂ ಸಮಸ್ಯೆ ಇಲ್ಲದೆ ವಿದ್ಯುತ್ ಪೂರೈಸಲು ಕುಸುಮ್ ಸಿ ಅನುಕೂಲವಾಗಲಿದೆ ಎಂದರು.ಬೇಡಿಕೆಗೆ ತಕ್ಕಷ್ಟು ವಿದ್ಯುತ್:
ಈಗಾಗಲೇ ಪಾವಗಡದಲ್ಲಿ ಏಷ್ಯಾದಲ್ಲೇ ಬೃಹತ್ತಾದ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿ 16 ಲಕ್ಷ ಕಿ.ಮೀ ಉದ್ದದಷ್ಟು ವಿದ್ಯುತ್ ಮಾರ್ಗ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಮಾಡಲು ಹಾಗೂ ನಿರಂತರ ವಿದ್ಯುತ್ ಸರಬರಾಜಿಸಲು ಪೂರಕವಾಗಿ ಇಲಾಖೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.ಈ ಹಿಂದೆ ಅಕ್ರಮ ಸಕ್ರಮದಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಈವರೆಗೆ 2.5 ಲಕ್ಷ ಅರ್ಜಿಗಳು ವಿಲೇವಾರಿಯಾಗಿದ್ದು, ಉಳಿದ ಅರ್ಜಿಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್, ಗೌರಿಬಿದನೂರು ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ,ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ ಟಿ ನಿಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ , ಅಪರ ಜಿಲ್ಲಾಧಿಕಾರಿ ಡಾ ಎನ್ ಭಾಸ್ಕರ್,ಉಪ ವಿಭಾಗಾಧಿಕಾರಿ ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.