ಜಿಲ್ಲಾ ಸರ್ಜನ್ ಡಾ. ಮೋಹನ್ಕುಮಾರ್ಗೆ ಮನವಿ
ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸವಲತ್ತಿನ ಕೊರತೆ ಇದೆ. ಕೂಡಲೇ ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಜಿಲ್ಲಾ ಸರ್ಜನ್ ಡಾ. ಮೋಹನ್ಕುಮಾರ್ಗೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿ ಕರವೇ ಜಿಲ್ಲಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಜಿಲ್ಲಾಸ್ಪತ್ರೆಯಲ್ಲಿ ಶೌಚಾಲಯ ಸೇರಿದಂತೆ ಇನ್ನಿತರೆಡೆ ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ರೋಗಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದ್ದು ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಬದಲಾವಣೆ ಕಂಡು ಬಂದಿಲ್ಲ ಎಂದು ದೂರಿದರು.ಆಸ್ಪತ್ರೆ ಹೊರಾಂಗಣದಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ಇನ್ನಷ್ಟು ಸಮಸ್ಯೆಗಳು ಉದ್ಭವಿಸುತ್ತಿವೆ. ಜಿಲ್ಲೆಯ ವಿವಿಧೆಡೆ ಯಿಂದ ಆಗಮಿಸುವ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲವೆಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ಹೇಳಿದರು.ಆಸ್ಪತ್ರೆಯ ಕೆಲವು ವೈದ್ಯರು ಖಾಸಗಿ ಕ್ಲೀನಿಕ್ಗಳನ್ನು ತೆರೆದಿದ್ದಾರೆ. ಕ್ಲೀನಿಕ್ನಲ್ಲಿ ರೋಗಿಗಳಿಗೆ ತೋರುವ ವಿಶೇಷ ಕಾಳಜಿ , ಜಿಲ್ಲಾಸ್ಪತ್ರೆಯ ಕರ್ತವ್ಯದಲ್ಲಿ ತೋರದೇ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.