ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತೋತ್ಸವಕ್ಕೆ ಪ್ರಧಾನಮಂತ್ರಿ ಭೇಟಿಯ ಪೂರ್ವತಯಾರಿಗಳ ಬಗ್ಗೆ ಗೀತಾ ಮಂದಿರದಲ್ಲಿ ಸೋಮವಾರ ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ ನಡೆಯಿತು.
ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸಿ: ಪರ್ಯಾಯ ಶ್ರೀ ಮನವಿ
ಕನ್ನಡಪ್ರಭ ವಾರ್ತೆ ಉಡುಪಿ
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತೋತ್ಸವಕ್ಕೆ ಪ್ರಧಾನಮಂತ್ರಿ ಭೇಟಿಯ ಪೂರ್ವತಯಾರಿಗಳ ಬಗ್ಗೆ ಗೀತಾ ಮಂದಿರದಲ್ಲಿ ಸೋಮವಾರ ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಪರ್ಯಾಯ ಶ್ರೀಗಳು, ತಮ್ಮ ಕಳೆದ ಪರ್ಯಾಯದಲ್ಲಿ ಗುಜರಾತಿನ ಮುಖ್ಯಮಂತ್ರಿಗಳಾಗಿ ಆಗಮಿಸಿದ್ದ ನರೇಂದ್ರ ಮೋದಿಯವರು ಈ ಬಾರಿ ಪುನಃ ನಮ್ಮ ಪರ್ಯಾಯದಲ್ಲಿಯೇ ಪ್ರಧಾನಮಂತ್ರಿಗಳಾಗಿ ಆಗಮಿಸುತ್ತಿದ್ದು, ಉಡುಪಿಯ ಸಭ್ಯತೆ, ಸಂಸ್ಕೃತಿ, ಆತಿಥ್ಯಗಳ ವಿಶೇಷತೆಗಳು ಸರ್ವರಿಗೂ ತಿಳಿಯುವಂತೆ ಕಾರ್ಯಕ್ರಮ ಆಯೋಜನೆಯಾಗಬೇಕಿದೆ. ತಿಂಗಳ ಪರ್ಯಂತವಾಗಿ ನಡೆಯುವ ಗೀತೋತ್ಸವದಲ್ಲಿ ಸಂತ ಸಂಗಮ, ಗೀತಾ ಮಹಾಯಾಗ, ಅಂತಾರಾಷ್ಟ್ರೀಯ ಗೀತಾ ಸಮ್ಮೇಳನ ಇತ್ಯಾದಿ ನಡೆಯಲಿದ್ದು, ಈ ಕಾರ್ಯಕ್ರಮಗಳಿಗಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಅಮೆರಿಕ ಸೇರಿದಂತೆ ವಿಶ್ವದ ಹಲವು ಗಣ್ಯರು ಹಾಗೂ ಹಲವು ಕೇಂದ್ರ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ. ಇದು ಸಮಗ್ರ ಉಡುಪಿಗೆ ಗೌರವ ತರುವ ಐತಿಹಾಸಿಕ ಕಾರ್ಯಕ್ರಮವಾಗಲಿದ್ದು, ಜಿಲ್ಲಾ ಆಡಳಿತ ವ್ಯವಸ್ಥೆ ಮತ್ತು ಎಲ್ಲ ಜನರೂ ಇದರ ಯಶಸ್ಸಿಗೆ ಕೈಜೋಡಿಸಬೇಕು ಎಂದು ಆಶಿಸಿದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉಡುಪಿಗೆ ಪ್ರಧಾನಮಂತ್ರಿಗಳ ಭೇಟಿಯೊಂದಿಗೆ ಉಡುಪಿಯ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಬಲ ಸಿಕ್ಕಂತಾಗುವುದು. ಇದಕ್ಕಾಗಿ ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಸಹಕರಿಸಬೇಕು ಎಂದು ಕೋರಿದರು.ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಕಾಪು ಶಾಸಕ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಸಹಕರಿಸುವ ಭರವಸೆ ನೀಡಿದರು..
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಕಂದಾಯ ಉಪ ಆಯುಕ್ತೆ ರಶ್ಮೀ, ತಹಸೀಲ್ದಾರ್ ಗುರುರಾಜ್ ಮೊದಲಾದವರು ಭಾಗವಹಿಸಿದ್ದರು.ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಸಾಗರೋತ್ತರ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ವಂದಿಸಿದರು. ಶ್ರೀಮಠದ ಪ್ರಮುಖರಾದ ಸಂತೋಷ್ ಶೆಟ್ಟಿ ತೆಂಕರಗುತ್ತು, ರತೀಶ್ ತಂತ್ರಿ, ಪ್ರಮೋದ್ ಸಾಗರ್, ಯೋಗೀಂದ್ರ ಭಟ್, ರವೀಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.