ಹೊಸಪೇಟೆ : ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೋಡಿ ರಥೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಹೇಳಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ಏ. 17ರಂದು ನಡೆಯುವ ಮರಿಯಮ್ಮನಹಳ್ಳಿ ಪಟ್ಟಣದ ಜೋಡಿ ರಥೋತ್ಸವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.
ಜಾತ್ರೆಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಬೇಕು. ಜನರಿಗೆ ಕುಡಿಯುವ ನೀರಿಗೆ ಅನುಕೂಲತೆ ಕಲ್ಪಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಅಕ್ರಮಗಳ ತಡೆಗೆ ಕ್ರಮ ವಹಿಸಬೇಕು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸುಗಮ ಸಂಚಾರಕ್ಕೆ ಅನುಕೂಲವಾಗುವ ಹಾಗೆ ರಸ್ತೆ ಮಾರ್ಗದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಮತ್ತು ಶ್ರಿ ಆಂಜನೇಯ ಸ್ವಾಮಿ ಜೋಡಿ ರಥೋತ್ಸವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಏಪ್ರಿಲ್ 14ರಂದು ಹನುಮಂತೋತ್ಸವ, ಏಪ್ರಿಲ್ 15ರಂದು ಗರುಡೋತ್ಸವ, ರಾತ್ರಿ 10 ಗಂಟೆಗೆ ಉಡಿತುಂಬುವ ಕಾರ್ಯಕ್ರಮ, ಏಪ್ರಿಲ್ 16ರಂದು ಬಿಳಿ ಆನೆ ಉತ್ಸವ, ಏಪ್ರಿಲ್ 18ರಂದು ಪೂರ್ಣಾಹುತಿ, ಕಂಕಣ ವಿಸರ್ಜನೆ, ವಸಂತೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಪ ತಹಸೀಲ್ದಾರು ಮತ್ತು ದೇವಸ್ಥಾನದ ಆಡಳಿತಾಧಿಕಾರಿ ನಾಗರಾಜ್ ಎಚ್. ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೊಸಪೇಟೆ ತಹಸೀಲ್ದಾರ್ ಶ್ರುತಿ ಎಂ.ಎಂ., ಡಿಎಚ್ಒ ಡಾ. ಎಲ್.ಆರ್. ಶಂಕರ್ ನಾಯ್ಕ, ಮರಿಯಮ್ಮನಹಳ್ಳಿ ಪಿಎಸ್ಐ ಮೌನೇಶ, ಜೆಸ್ಕಾಂನ ದಯಾನಂದ ಜೆ., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಇತರರಿದ್ದರು.