ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜೆಡಿಎಸ್ ಹಾಗೂ ಬಿಜೆಪಿ ಪರಸ್ಪರ ತಲಾ 10 ತಿಂಗಳು ಅಧಿಕಾರ ನಡೆಸುವ ಒಪ್ಪಂದ ಮಾಡಿಕೊಂಡಿದ್ದಂತೆ ಇದೀಗ ಜೆಡಿಎಸ್ನ ಶೀಲಾ ದಿನೇಶ್ ಅವರ 10 ತಿಂಗಳ ಅಧಿಕಾರ ಗುರುವಾರಕ್ಕೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಬಿಜೆಪಿಯಿಂದ ಯಾರು ಅಧ್ಯಕ್ಷರಾಗಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಹೀಗಾಗಿ, ಶುಕ್ರವಾರ ಹಂಗಾಮಿ ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷೆ ಲಿಲಿತಾ ರವಿ ನಾಯ್ಕ್ ಅವರನ್ನು ನೇಮಿಸಿದ್ದು, ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಲಲಿತಾ ರವಿ ನಾಯ್ಕ್ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷೆ ಶೀಲಾ ದಿನೇಶ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ, ಬಿಜೆಪಿ ನಗರಾಧ್ಯಕ್ಷ ಕೆ.ಎಸ್. ಪುಷ್ಪರಾಜ್ ಮತ್ತಿತರರು ಶುಭ ಕೋರಿದರು.
ನಗರ ಸಭೆ ನಿಕಟಪೂರ್ವ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಈ ಹಿಂದಿನ ಒಪ್ಪಂದದಂತೆ 10 ತಿಂಗಳ ಕಾಲ ಜನರು ಮೆಚ್ಚುವಂತೆ ಕೆಲಸ ಮಾಡಿದ್ದೇನೆ. ನಮ್ಮ ನಾಯಕರಾದ ಎಸ್.ಎಲ್. ಭೋಜೇಗೌಡ ಸೇರಿದಂತೆ ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮಾರ್ಗದರ್ಶನದಂತೆ ಉತ್ತಮ ಕೆಲಸ ಮಾಡಿದ್ದೇನೆ ಎಂಬ ಖುಷಿ ನನಗಿದೆ ಎಂದರು.
ಜೆಡಿಎಸ್ ಪಕ್ಷದಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾದರೂ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಹೀಗಾಗಿ ಎಲ್ಲರ ಸಲಹೆ ಮೇರೆಗೆ ಉತ್ತಮ ಕೆಲಸ ಮಾಡಿದ್ದೇನೆ ಎನ್ನುವ ನಂಬಿಕೆ ಇದೆ. ನಗರದ ಸ್ವಚ್ಚತೆ ಬಗ್ಗೆ ಎಸ್.ಎಲ್.ಭೋಜೇಗೌಡ ಅವರು ಕಾಳಜಿ ವಹಿಸಿದ್ದರು. ಆದರಂತೆ ಚಿಕ್ಕಮಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಇದಲ್ಲದೆ ಪ್ರತಿ ವಾರ್ಡ್ನಲ್ಲಿಯೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವುದು ತೃಪ್ತಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಒಂದು ಅವಧಿಗೆ ಜೆಡಿಎಸ್ ಗೆ ನೀಡಬೇಕು ಎಂದು ಒಪ್ಪಂದ ಮಾಡಿ ಕೊಂಡಿದ್ದವು. ಆದರಂತೆ ಶೀಲಾ ದಿನೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದೆವು. ಆಂತರಿಕ ಒಪ್ಪಂದದಂತೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಪ್ರಭಾರ ಅಧ್ಯಕ್ಷರನ್ನಾಗಿ ಲಲಿತ ರವಿ ನಾಯಕ ಅಧಿಕಾರ ಸ್ವೀಕರಿಸಿದ್ದಾರೆ. ಮುಂದಿನ 10 ತಿಂಗಳ ಅವಧಿಗೆ ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.
ಚಿಕ್ಕಮಗಳೂರು ನಗರಸಭೆಯಲ್ಲಿ ಕೆಲಗೊಂದಲಗಳ ಹೊರತಾಗಿ ಪಕ್ಷಾತೀತವಾಗಿ ಎಲ್ಲರೂ ಕಾರ್ಯ ನಿರ್ವಹಣೆ ಮಾಡುತ್ತಿ ದ್ದಾರೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ನಗರಸಭೆ ಯಲ್ಲಿ ಅತ್ಯದ್ಭುತವಾಗಿ ಕೆಲಸ ಮಾಡಿರುವ ಸದಸ್ಯರಿಗೆ ಅಧ್ಯಕ್ಷರ ಅಧಿಕಾರ ಸಿಗಲಿದೆ. ಮುಂದೆ ಅಧಿಕಾರ ಸ್ವೀಕರಿಸಲಿರುವ ಅಧ್ಯಕ್ಷರು ಉತ್ತಮ ಕೆಲಸ ಮಾಡಿ ಜನರಿಗೆ ಅನುಕೂಲ ಒದಗಿಸುವ ಜೊತೆಗೆ ನಮ್ಮ ಪಕ್ಷಕ್ಕೂ ಕೀರ್ತಿ ತರಲಿ.