ಲೋಕ ಅದಾಲತ್ ಮೂಲಕ ಭೂಸ್ವಾಧೀನ ಪ್ರಕರಣ ಇತ್ಯರ್ಥ

KannadaprabhaNewsNetwork |  
Published : Dec 23, 2025, 01:15 AM IST
ವಿಜೆಪಿ ೨೧ವಿಜಯಪುರ ಪಟ್ಟಣದ ಪ್ರವಾಸಿಮಂದಿರದಲ್ಲಿ ಬೆಸ್ತರ ಜಿಲ್ಲಾ ಸಂಘದ ಪದಾಧಿಕಾರಿಗಳ ನೇಮಕ ಸಭೆ ನಡೆಯಿತು. | Kannada Prabha

ಸಾರಾಂಶ

ಡಿ.ಕೆ.ಶಿವಕುಮಾರ್ ಹಾಗೂ ಶಾಸಕ ಟಿ.ರಘುಮೂರ್ತಿ ಅವರ ಮಕ್‌ ಶಾಟ್ ಪೋಟೋ ಬಳಸಿಕೊಳ್ಳಿ..

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಲೋಕ ಅದಾಲತ್ ಮೂಲಕ ಭೂಸ್ವಾಧೀನ ಪ್ರಕರಣ ಇತ್ಯರ್ಥಕ್ಕೆ ಮುಂದಾಗಲಾಗಿದ್ದು ಭದ್ರಾ ಮೇಲ್ದಂಡೆ ಯೋಜನೆ ಸಂಬಂಧಿಸಿದೆ ಅಬ್ಬಿನಹೊಳಲು ಬಳಿ ಕಾಲುವೆ ನಿರ್ಮಾಣದ ಕಾಮಗಾರಿಗೆ ಎದರುಗಿದ್ದ ಆತಂಕ ನಿವಾರಣೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಾರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರ ಗಮನ ಸೆಳೆಯುವ ಸೂಚನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲಿಖಿತ ಉತ್ತರ ನೀಡಿದ್ದಾರೆ. ಚಿತ್ರದುರ್ಗ ಶಾಖಾ ಕಾಲುವೆ ಆರಂಭದಿಂದ 134.597 ಕಿಮೀ ವರೆಗಿನ ನಿರ್ಮಾಣಕ್ಕೆ ರು.1,723.42 ಕೋಟಿ ವೆಚ್ಚದಲ್ಲಿ 12 ಪ್ಯಾಕೇಜ್‍ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 134.597 ಕಿಮೀ ಕಾಲುವೆ ನಿರ್ಮಾಣ ಕಾಮಗಾರಿಯ ಪೈಕಿ 126.255 ಕಿಮೀ ಕಾಮಗಾರಿಗಳು ಪೂರ್ಣಗೊಂಡಿರುತ್ತವೆ. ಉಳಿದ 8.342 ಕಿಮೀ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ. ಭೂಸ್ವಾಧೀನ ಪರಿಹಾರ ಕುರಿತಂತೆ ಅಜ್ಜಂಪುರ ತಾಲೂಕು ಅಬ್ಬಿನಹೊಳಲು ಗ್ರಾಮದ ಭೂಮಾಲೀಕರು ಈ ಕಾಲುವೆಯ ಪ್ರಾರಂಭಿಕ ರೀಚ್ ಸರಪಳಿ 0.900ಕಿಮೀ ನಿಂದ 2.600 ಕಿಮೀ ವರೆಗಿನ ಕಾಮಗಾರಿಕೆ ಅಡ್ಡಿ ಪಡಿಸಿದ್ದರು. ಆದ್ದರಿಂದ ಸಮಸ್ಯೆ ಪರಿಹರಿಸಲು ಖುದ್ದಾಗಿ ಭೇಟಿ ನೀಡಿ ಸ್ಥಳೀಯ ರೈತರ ಮನವೊಲಿಸಿದ್ದೇನೆ, ಕಾಮಗಾರಿಗೆ ಸದ್ಯ ಯಾವುದೇ ಅಡ್ಡಿಯಿಲ್ಲ ಎಂದಿದ್ದಾರೆ.

ಭೂಸ್ವಾಧೀನ ಕುರಿತಂತೆ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳು ಇತ್ಯರ್ಥವಾಗಲು ಕನಿಷ್ಠ 3ರಿಂದ 4 ವರ್ಷಗಳಾಗುತ್ತದೆ. ಇದರಿಂದ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಶೇ.15 ಬಡ್ಡಿ ರೂಪದಲ್ಲಿ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಕಾಮಗಾರಿಯೂ ವಿಳಂಬದಿಂದಾಗಿ ಯೋಜನೆಯ ವೆಚ್ಚವು ಹೆಚ್ಚಾಗುತ್ತದೆ. ಆದ್ದರಿಂದ ಅಬ್ಬಿನಹೊಳಲು ಗ್ರಾಮಕ್ಕೆ ಸಂಬಂಧಿಸಿದಂತೆ 44 ಎ 20.08 ಗುಂ ಜಮೀನಿಗೆ ಸಂಬಂಧಿಸಿದ ಪ್ರಕರಣಗಳನ್ನು ಲೋಕ್ ಅದಾಲತ್ತಿನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅನುಮೋದನೆ ನೀಡಲಾಗಿದೆ.

ಲೋಕ್ ಅದಾಲತ್ ತೀರ್ಪಿನನ್ವಯ ರೈತರಿಂದ ಭೂಸ್ವಾಧೀನ ಪಡೆದು ಬಾಕಿ ಉಳಿದಿರುವ 120ಮೀ ಉದ್ದದ ಕಾಲುವೆಯನ್ನು ಪ್ರಾರಂಭಿಸಿ ಚಿತ್ರದುರ್ಗ ಶಾಖಾ ಕಾಲುವೆಯ ಸರಪಳಿ 114.200 ಕಿಮೀವರೆಗೆ ನೀರನ್ನು ಹರಿಸಲಾಗುವುದು. ಇದರೊಂದಿಗೆ ಬಾಕಿ ಉಳಿದ ಚಿತ್ರದುರ್ಗ ಶಾಖಾ ಕಾಲುವೆಯ ಸರಪಳಿ 114.209 ಕಿ.ಮೀ. ರಿಂದ 116.171 ಕಿ.ಮೀ.ವರೆಗಿನ ಗೋನೂರು ಅಕ್ವಡಕ್ಟ್ (ಮೇಲ್ಮಟ್ಟದ ಕಾಲುವೆ) ಕಾಮಗಾರಿಯಲ್ಲಿನ ಕೆಲವು ಭೂಸ್ವಾಧೀನ ಸಮಸ್ಯೆಗಳನ್ನು ನಿವಾರಿಸಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಿ, ಪ್ರಾಯೋಗಿಕ ಚಾಲನೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಉತ್ತರದಲ್ಲಿ ನೀಡಿದ್ದಾರೆ.

ಕೇಂದ್ರ ಸರ್ಕಾರ 2023-24ನೇ ಸಾಲಿನ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ತ್ವರಿತವಾಗಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಅನುಷ್ಠಾನ ಮಾಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅನುದಾನ ಬಿಡುಗಡೆಗೆ ಕೋರಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದ ಹಣಕಾಸಿನ ನೆರವು ದೊರೆತಲ್ಲಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬಹುದಾಗಿದೆ.

ಯೋಜನೆಯ ಪ್ರಥಮ ಹಂತದಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡುವ ರೂ.324 ಕೋಟಿಗಳ ಮೊತ್ತದ (ಪ್ಯಾಕೇಜ್-1) ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.

ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗದವರೆಗೆ 29.90 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡುವ ರೂ.1,032 ಕೋಟಿಗಳ ಮೊತ್ತದ (ಪ್ಯಾಕೇಜ್-2) ಮತ್ತು ಅಜ್ಜಂಪುರ ಸುರಂಗ ನಿರ್ಮಾಣ ಮಾಡುವ ರೂ.223.96 ಕೋಟಿಗಳ ಮೊತ್ತದ (ಪ್ಯಾಕೇಜ್-3) ಕಾಮಗಾರಿಗಳು ಪೂರ್ಣಗೊಂಡಿರುತ್ತವೆ. ಭದ್ರಾ ಜಲಾಶಯದಿಂದ ಅಜ್ಜಂಪುರ ಸುರಂಗದ ಮೂಲಕ 2019-2020ನೇ ಸಾಲಿನಿಂದ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗಿರುತ್ತದೆ.

ಎರಡನೆ ಹಂತದಲ್ಲಿ ತರೀಕೆರೆ ಏತ ನೀರಾವರಿ, ಚಿತ್ರದುರ್ಗ ಹಾಗೂ ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಮೂಲಕ ಸೂಕ್ಷ್ಮ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರೊಂದಿಗೆ ಜಗಳೂರು ಶಾಖಾ ಕಾಲುವೆ, ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮೂರು, ಪಾವಗಡ, ಚಿಕ್ಕನಾಯಕನಹಳ್ಳಿ ಹಾಗೂ ಶಿರಾ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ