ಜಮೀನು ದಾಖಲೆ ಅಕ್ರಮ ತಡೆಗೆ ಭೂ ಸುರಕ್ಷಾ: ಕಂದಾಯ ಸಚಿವ ಕೃಷ್ಣ ಭೈರೇಗೌಡ

KannadaprabhaNewsNetwork |  
Published : Feb 07, 2026, 02:00 AM IST
ಚಿತ್ರ 2 | Kannada Prabha

ಸಾರಾಂಶ

ಜಮೀನಿನ ಮೂಲ ದಾಖಲೆಗಳ ನಾಶ ಹಾಗೂ ದುರುಪಯೋಗವಾಗುವುದನ್ನು ತಡೆಯಲು ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ 63.58 ಕೋಟಿ ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ರೈತರು ಆನ್‌ಲೈನ್ ಮೂಲಕವೇ ಹಳೆಯ ಕಂದಾಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಅನಗತ್ಯವಾಗಿ ತಾಲೂಕು ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಮೀನಿನ ಮೂಲ ದಾಖಲೆಗಳ ನಾಶ ಹಾಗೂ ದುರುಪಯೋಗವಾಗುವುದನ್ನು ತಡೆಯಲು ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ 63.58 ಕೋಟಿ ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ರೈತರು ಆನ್‌ಲೈನ್ ಮೂಲಕವೇ ಹಳೆಯ ಕಂದಾಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಅನಗತ್ಯವಾಗಿ ತಾಲೂಕು ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಜನರು ಸಣ್ಣಪುಟ್ಟ ಕೆಲಸಗಳಿಗೆ ಕಚೇರಿಗಳಿಗೆ ಅಲೆಯಬಾರದು, ಮಧ್ಯವರ್ತಿಗಳ ಕಾಟ ತಪ್ಪಿಸಬೇಕು ಎಂದು ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುತ್ತಿದ್ದೇವೆ. ದಾಖಲೆಗಳಿಲ್ಲದ ತಾಂಡಾ, ಹಟ್ಟಿ, ಹಾಡಿ ಹಾಗೂ ಜನವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆ ನೀಡಿ ಅಲ್ಲಿ ವಾಸಿಸುವ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಎರಡೂವರೆ ವರ್ಷಗಳಲ್ಲಿ 2,20,000 ಕುಟುಂಬಗಳಿಗೆ ಹಕ್ಕು ಪತ್ರ ತಲುಪಿಸುವ ಗುರಿ ಇಟ್ಟುಕೊಂಡಿದೆ. ಕಳೆದ ವರ್ಷ ಹೊಸಪೇಟೆ ನಗರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ 1.20 ಲಕ್ಷ ಕುಟುಂಬಗಳಿಗೆ ಈಗಾಗಲೇ ಹಕ್ಕುಪತ್ರ ನೀಡಲಾಗಿದೆ. ಫೆ.14ರಂದು ಹಾವೇರಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲುವ ಮೂಲಕ ಏಕಕಾಲಕ್ಕೆ ಉಳಿದ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

11 ಲಕ್ಷ ಪೌತಿ ಖಾತೆಗಳ ಬದಲಾವಣೆ:

ಜಮೀನುಗಳ ನಕಲಿ ವ್ಯವಹಾರ ಮತ್ತು ವಂಚನೆಗಳನ್ನು ತಡೆಯಲು ಆರ್‌ಟಿಸಿ ದಾಖಲೆಗಳಿಗೆ ಮಾಲೀಕರ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅಭಿಯಾನದ ಮಾದರಿಯಲ್ಲಿ ಪೌತಿ ಖಾತೆಗಳ ಬದಲಾವಣೆಗೆ ಸರ್ಕಾರ ಮುಂದಾಗಿದ್ದು ಮೃತಪಟ್ಟ ಮಾಲೀಕರ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರಿಗೆ ವರ್ಗಾಯಿಸಲು ಇ-ಪೌತಿ ಆಂದೋಲನ ನಡೆಸಲಾಗುತ್ತಿದೆ ಎಂದರು.

ಬಾಕಿ ಪ್ರಕರಣಗಳ ವಿಲೇವಾರಿ:

ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಕಂದಾಯ ಇಲಾಖೆಗೆ ಸಂಬoಧಿಸಿದoತೆ ತಹಶೀಲ್ದಾರ್ ಹಂತದಲ್ಲಿ 10,774 ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ 73,624 ಅವಧಿ ಮೀರಿದ ಪ್ರಕರಣಗಳು ಬಾಕಿ ಇದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಹೆಚ್ಚುವರಿಯಾಗಿ 25 ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಹೊಸ ತಾಲೂಕುಗಳಿಗೆ ಪ್ರಜಾಸೌಧ:

ಹೊಸದಾಗಿ ಘೋಷಣೆಯಾದ 63 ಹೊಸ ತಾಲೂಕುಗಳ ಪೈಕಿ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 14 ತಾಲ್ಲೂಕುಗಳಿಗೆ ಕಚೇರಿಗಳ ಮಂಜೂರಾತಿ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಉಳಿದ 49 ತಾಲೂಕುಗಳಲ್ಲಿ ಪ್ರಜಾಸೌಧ ಹೆಸರಿನಡಿ ಸುಸಜ್ಜಿತ ಕಚೇರಿ ಕಟ್ಟಡಗಳನ್ನು ಮಂಜೂರು ಮಾಡಿ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಪ್ರಜಾಸೌಧಗಳು ಸಾರ್ವಜನಿಕ ಸೇವೆಗೆ ಸಿದ್ಧವಾಗಲಿವೆ ಎಂದರು.

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಯೋಗೀಶ್‌ಬಾಬು, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಭೂ ದಾಖಲೆಗಳ ಉಪನಿರ್ದೇಶಕಿ ಭಾಗ್ಯಮ್ಮ, ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಲ್ಪಕಲಾ ಅಕಾಡೆಮಿ ಗೌರವ-ಶಿಲ್ಪಶ್ರೀ ಪ್ರಶಸ್ತಿ ಪ್ರಕಟ
ಹಿರಿಯ ಕವಿಗಳ ಬರಹದಿಂದ ಹೆಚ್ಚು ಪ್ರಭಾವಿತ: ಪ್ರೊ.ರಂಗಸ್ವಾಮಿ