ಕೊಪ್ಪಳ ಗವಿಮಠಕ್ಕೆ ಮಾಜಿ ಮುಖ್ಯಮಂತ್ರಿ ಭೇಟಿ, ಶ್ರೀಗಳ ಜತೆ ಮಾತುಕತೆಕನ್ನಡಪ್ರಭ ವಾರ್ತೆ ಕೊಪ್ಪಳ
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಯಾದರೂ ಸರ್ಕಾರ ಕೇರ್ ಮಾಡುತ್ತಿಲ್ಲ ಮತ್ತು ಹಗರಣವಾದರೂ ಸರಿಯಾಗಿ ಕ್ರಮ ವಹಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.ನಗರದ ಗವಿಮಠಕ್ಕೆ ಭೇಟಿ ನೀಡಿ, ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ನೇಹಾ ಪ್ರಕರಣ ಸೇರಿದಂತೆ ಅನೇಕ ಕೊಲೆ ಪ್ರಕರಣಗಳು ನಡೆದಿವೆ. ಗೂಂಡಾಗಳ ದಾಂಧಲೆ ನಡೆದಿವೆ. ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ಕುರಿತು ಸರಿಯಾದ ಕ್ರಮವಹಿಸುತ್ತಿಲ್ಲ. ಸಚಿವರು ಮೌಖಿಕ ಆದೇಶ ಮಾಡಿದ್ದಾರೆ ಎಂದು ಡೆತ್ನೋಟ್ನಲ್ಲಿಯೇ ಇದ್ದರೂ ಸಚಿವರ ರಾಜೀನಾಮೆ ಪಡೆಯುತ್ತಿಲ್ಲ. ಅದನ್ನು ಸಹಿಸಿಕೊಂಡು ಸುಮ್ಮನೇ ಇರಲು ಆಗುವುದಿಲ್ಲ. ಸಚಿವರ ರಾಜೀನಾಮೆ ನೀಡುವಂತೆ ಹೋರಾಟ ಮಾಡಲಾಗುವುದು ಎಂದರು.ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟವಾಗಿದೆ. ಈಗಾಗಲೇ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಾಗಬೇಕು ಎಂದು ಆಗ್ರಹಿಸಿದ್ದೇವೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಎಸ್ಐಟಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿದಂತೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ. ಆದರೂ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ರೈತರ ನೆರವಿಗೆ ಧಾವಿಸುತ್ತಿಲ್ಲ. ಸಬ್ಸಿಡಿ ಹೆಚ್ಚಳ ಮಾಡುವ ಮೂಲಕ ದರ ಏರಿಕೆ ನಿಯಂತ್ರಿಸಿ, ರೈತರಿಗೆ ಅನುಕೂಲ ಮಾಡಿಕೊಡುವ ಅವಕಾಶ ಇದ್ದರೂ ರಾಜ್ಯ ಸರ್ಕಾರ ಮಾಡಲಿಲ್ಲ ಎಂದರು.ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ. ಆದರೂ ಸರ್ಕಾರ ಗಮನ ಹರಿಸುತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಹದಿನೈದು ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಿದ್ದೇವೆ. ಅದನ್ನು ಪೂರ್ಣಗೊಳಿಸುತ್ತಿಲ್ಲ. ಕಲ್ಯಾಣ ಕರ್ನಾಟಕದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೂ ಕ್ರಮ ವಹಿಸಿದ್ದೇವೆ. ಈಗಿನ ರಾಜ್ಯ ಸರ್ಕಾರ ಏನೂ ಮಾಡುತ್ತಿಲ್ಲ ಎಂದರು.
ಹಣಕಾಸು ಸ್ಥಿತಿಯಂತೂ ಹದಗೆಟ್ಟು ಹೋಗಿದೆ. ಹಾಲಿನ ಪ್ರೋತ್ಸಾಹಧನ ನೀಡಲು ಹಣ ಇಲ್ಲ. ಅರಣ್ಯ ಇಲಾಖೆಯ ಸಿಬ್ಬಂದಿ ವೇತನ ನೀಡುತ್ತಿಲ್ಲ. ವಿವಿಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.