ಸುಗಮ ಜೀವನಕ್ಕೆ ಕಾನೂನು ಅಗತ್ಯ

KannadaprabhaNewsNetwork |  
Published : Nov 26, 2024, 12:48 AM IST
ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿನ ಸಭಾಂಗಣದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನ್ಯಾ.ಕೆ.ಜಿ ಶಾಂತಿ ಅವರು ಮಾತನಾಡಿದರು.  | Kannada Prabha

ಸಾರಾಂಶ

ಪ್ರತಿಯೊಬ್ಬರೂ ಸಹ ಕಾನೂನು-ಕಾಯ್ದೆಗಳ ಅರಿವು ಹೊಂದಬೇಕು.

ಬಳ್ಳಾರಿ: ಸಮಾಜದಲ್ಲಿ ವಿವಿಧ ರೀತಿಯಲ್ಲಿ ವಂಚಿತರಾದವರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ನ್ಯಾಯ ಒದಗಿಸುವ ಸಮಾಜಮುಖಿ ಕೆಲಸದಲ್ಲಿ ಅರೆಕಾಲಿಕ ಸ್ವಯಂ ಸೇವಕರು ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನ್ಯಾ.ಕೆ.ಜಿ ಶಾಂತಿ ಅವರು ಹೇಳಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಹಾಗೂ ಬಳ್ಳಾರಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿನ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲೆಯ ಅರೆಕಾಲಿಕ ಸ್ವಯಂ ಸೇವಕರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎನ್ನುವ ಮಾತಿನಂತೆ ನಾಗರಿಕರು ಸುಗಮವಾಗಿ ಜೀವನ ನಡೆಸಲು ತಮ್ಮ ದೈನಂದಿನ ಜೀವನದಲ್ಲಿ ಕಾನೂನು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಸಹ ಕಾನೂನು-ಕಾಯ್ದೆಗಳ ಅರಿವು ಹೊಂದಬೇಕು ಎಂದರು.

ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಾದಕ ವ್ಯಸನ ಸೇರಿದಂತೆ ಇನ್ನಿತರೆ ಕಾನೂನು ಬಾಹಿರ ಪ್ರಕರಣಗಳು ಕಂಡುಬಂದಲ್ಲಿ ಅರೆ ಕಾಲಿಕ ಸ್ವಯಂ ಸೇವಕರು ಮತ್ತು ಸಾರ್ವಜನಿಕರೂ ಸಹ ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಅನ್ಯಾಯ ಹಾಗೂ ದೌರ್ಜನ್ಯ ತಡೆಗಟ್ಟುವ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಬಡತನ, ಜ್ಞಾನದ ಕೊರತೆ, ಹಾಗೂ ಅಸಹಾಯಕತೆಯಿಂದ ನ್ಯಾಯ ವಂಚಿತರಾದವರಿಗೆ ಕಾನೂನು ಕಾಯ್ದೆಗಳ ಸಲಹೆ ಒದಗಿಸಿ, ನೊಂದವರಿಗೆ ಸಕಾಲಕ್ಕೆ ನ್ಯಾಯ ಒದಗಿಸಬೇಕು ಹಾಗೂ ಬಡವರ, ನೊಂದವರ, ಮಹಿಳೆಯರ, ಕಾರ್ಮಿಕರ ಪರ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅರ್ಹ ಫಲಾನುಭವಿಗಳಿಗೆ ಕ್ರಮಬದ್ಧವಾಗಿ ತಲುಪಿಸುವ ಕಾರ್ಯವಾಗಬೇಕು ಎಂದರು.

ಸಂವಿಧಾನದಡಿ ಇರುವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಸಾರ್ವಜನಿಕರು ಹಕ್ಕುಗಳ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ತಮಗಿರುವ ಕರ್ತವ್ಯಗಳ ಬಗ್ಗೆ ಮನದಟ್ಟಣೆ ಮಾಡಿಕೊಂಡು ನ್ಯಾಯಯುತ ಬಾಳ್ವೆ ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್.ಎನ್ ಹೊಸಮನೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಅಪೇಕ್ಷೆ ಬಯಸದೇ ಸ್ವಯಂ ಪ್ರೇರಿತರಾಗಿ ಕಾರ್ಯನಿರ್ವಹಿಸುವ ಅರೆ ಕಾಲಿಕ ಕಾನೂನು ಸ್ವಯಂ ಸೇವಕರು ಸಮಾಜದ ಒಳಿತಿಗಾಗಿ ಶ್ರಮಿಸಿ, ಅರ್ಹರಿಗೆ ನ್ಯಾಯ ಒದಗಿಸುವ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಈ ಒಂದು ದಿನದ ಕಾರ್ಯಾಗಾರ ಆಯೋಜನೆಯಲ್ಲಿ ಅರೆ ಕಾಲಿಕ ಸ್ವಯಂ ಸೇವಕರು ಕಾನೂನು-ಕಾಯ್ದೆಗಳ ಅರಿವು ಪಡೆದುಕೊಂಡು, ನೊಂದವರಿಗೆ ಕಾನೂನು ನೆರವು ನೀಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಮಾತನಾಡಿದರು.

ಕಾರ್ಯಾಗಾರದಲ್ಲಿ ಗುಡ್ ಯೋಜನೆಯ ಯೋಜನಾ ಸಂಯೋಜಕರಾದ ಜನಿಫರ್ ವೈ, ಕೂಡ್ಲಿಗಿಯ ಸ್ನೇಹ ಸಂಸ್ಥೆಯ ನಿರ್ದೇಶಕ ಟಿ.ರಾಮಾಂಜನೇಯ, ಗುಡ್ ಯೋಜನೆಯ ಮಕ್ಕಳ ಭಾಗವಹಿಸುವಿಕೆ ಸುಗಮಗಾರರಾದ ಎನ್.ನಾಗಮಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮೌನೇಶ್, ವಕೀಲರಾದ ಶಿವಲೀಲಾ, ತ್ರಿವೇಣಿ ಪತ್ತಾರ್, ಸಿ.ಎಂ ಗುರುಬಸವರಾಜ್ ಅವರು ವಿವಿಧ ವಿಷಯ ಹಾಗೂ ಕಾನೂನು-ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಬಳ್ಳಾರಿಯ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ.ಹಡಗಲಿ ರಾಮು, ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಕೂಡ್ಲಿಗಿಯ ಸ್ನೇಹ ಸಂಸ್ಥೆಯ ನಿರ್ದೇಶಕ ಟಿ.ರಾಮಾಂಜನೇಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ಅರೆಕಾಲಿಕ ಸ್ವಯಂ ಸೇವಕರು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕೇಸ್‌
ಮಹಾ ಜಿಪಂ ಎಲೆಕ್ಷನ್‌ಗೆ ಮೈಸೂರು ಇಂಕ್‌ ಬಳಕೆ