ಹೊಸಪೇಟೆ: ಬೆಳಗಾವಿ ಮಹಿಳಾ ವಕೀಲೆ ಪೂಜಾ ಕಾಕಟಕರ್ ಅವರ ಮನೆಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಮಂಗಳವಾರ ಅಖಿಲ ಭಾರತ ವಕೀಲರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ವಕೀಲರಾದ ಪುಷ್ಪಲತಾ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ವಕೀಲರ ಮೇಲಿನ ದಾಳಿಯು ಕಾನೂನಿನ ಮೇಲಿನ ದಾಳಿಗೆ ಸಮ ಎಂದರು. ವಕೀಲೆ ಕರಿಬಸಮ್ಮ ಮಾತನಾಡಿ, ಮಹಿಳೆಯರ ಕುರಿತಾದ ಕೇಂದ್ರ ಸರ್ಕಾರದ ಭೇಟಿ ಬಚಾವ್ ಭೇಟಿ ಪಡಾವ್ ಎಲ್ಲಿ ಹೋಯಿತು ಎಂದು ಅವರು ಪ್ರಶ್ನಿಸಿದರು.
ಯುವ ವಕೀಲ ಹರಪನಹಳ್ಳಿ ಮಂಜುನಾಥ ಮಾತನಾಡಿ, ಸರ್ಕಾರ ಘಟನೆ ಕುರಿತು ನಿರ್ದಿಷ್ಟ ಅವಧಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ದಿನಗಳಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.ಘಟನೆಗೆ ಕಾರಣರಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು. ಘಟನೆಯನ್ನು ನ್ಯಾಯಾಂಗಿಕ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು. ವಕೀಲರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ವಕೀಲರ ಸಂರಕ್ಷಣಾ ಕಾಯ್ದೆಗೆ ತಕ್ಷಣವೇ ತಿದ್ದುಪಡಿ ಮಾಡಿ ಕಾಯ್ದೆಯಲ್ಲಿನ ಅಪರಾಧಗಳನ್ನು ಜಾಮೀನು ರಹಿತ ಅಪರಾಧಗಳನ್ನಾಗಿ ಪರಿಗಣಿಸಬೇಕು ಎಂದು ಘೋಷಣೆಗಳನ್ನು ಕೂಗಿ ಆಗ್ರಹಿಸಿದರು.