ಹಾವೇರಿ: ಅಥಣಿಯಲ್ಲಿ ವಕೀಲರ ಮೇಲೆ ಹಲ್ಲೆ ಖಂಡಿಸಿ ಹಾಗೂ ತಪ್ಪಿತಸ್ಥ ಪೊಲೀಸ್ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಶುಕ್ರವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊರವಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ ಮೂಲಕ ಸಾಗಿ ಹೊಸಮನಿ ಸಿದ್ದಪ್ಪ ವೃತ್ತವನ್ನು ತಲುಪಿತು. ಈ ವೇಳೆ ಮಾನವ ಸರಪಳಿ ನಿರ್ಮಿಸಿ ಪೊಲೀಸ್ ಇಲಾಖೆ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಚ್.ಸಿ. ಸಿದ್ದನಗೌಡ್ರ ಮಾತನಾಡಿ, ಕಳೆದ ಎರಡು ದಿನಗಳ ಹಿಂದೆಯಷ್ಟೇ ಅಥಣಿ ನಗರದ ಪೊಲೀಸ್ ಅಧಿಕಾರಿಗಳು ವಿನಾಕಾರಣ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಥಣಿಯ ವಕೀಲರ ಮೇಲೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದರೂ ಸಹಿತ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಈ ಘಟನೆಯನ್ನು ಹಾವೇರಿ ಜಿಲ್ಲಾ ವಕೀಲರ ಸಂಘ ಸಂಪೂರ್ಣವಾಗಿ ಖಂಡಿಸುತ್ತದೆ. ಕೂಡಲೇ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೈದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಇಲಾಖೆಯ ತನಿಖೆ ಕೈಗೊಂಡು ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಎಸ್.ಸಿ. ಪಾಟೀಲ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಂಟಿ ಕಾರ್ಯದರ್ಶಿ ಸಿ.ಎಸ್. ಹಿರೇಮಠ, ಖಜಾಂಚಿ ಸಿ.ಎಂ. ನೆಗಳೂರ, ನಿರ್ದೇಶಕರಾದ ಜಿ.ಬಿ. ಅಂದಾನಿಗೌಡ್ರ, ಎಸ್.ಸಿ. ಕುರವತ್ತಿಗೌಡ್ರ, ಸಿ.ವಿ. ಬಡಿಗೇರ, ಎಸ್.ಬಿ. ಹಳೇಮನಿ, ಜಿ.ಕೆ. ನಾಗನೂರ, ಎಸ್.ಸಿ. ಪೂಜಾರ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.