ಲಕ್ಷ್ಮೇಶ್ವರ: ಸಮೀಪದ ಯಳವತ್ತಿ ಗ್ರಾಮದ ಕೋಟೆ ಆವರಣದಲ್ಲಿ ಫೆ. 14ರಂದು ನಡೆಯುವ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕಲ ಸಿದ್ಧತೆ ಪೂರ್ಣಗೊಂಡಿವೆ.
ನುಡಿಜಾತ್ರೆಯಲ್ಲಿ ಶನಿವಾರ ಬೆಳಗ್ಗೆ 7.30ಕ್ಕೆ ಶಾಸಕ ಡಾ. ಚಂದ್ರು ಲಮಾಣಿ ರಾಷ್ಟ್ರ ಧ್ವಜಾರೋಹಣ ಹಾಗೂ ಪರಿಷತ್ತಿನ ಧ್ವಜವನ್ನು ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹಾಗೂ ಕನ್ನಡ ಧ್ವಜವನ್ನು ಕಸಾಪ ತಾಲೂಕು ಅಧ್ಯಕ್ಷ ಈಶ್ವರ ಮೆಡ್ಲೇರಿ ಅವರು ನೆರವೇರಿಸುವರು.
ಬೆಳಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಯಳವತ್ತಿ ಗ್ರಾಮದ ಮೃತ್ಯುಂಜಯ ಹಿರೇಮಠ ಚಾಲನೆ ನೀಡುವರು. ಮೆರವಣಿಗೆಯು ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದಿಂದ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿ ಸಮ್ಮೇಳನದ ಪ್ರಮುಖ ವೇದಿಕೆಯ ಸ್ಥಳ ಕೋಟೆಯ ಮುಂಭಾಗಕ್ಕೆ ಆಗಮಿಸಲಿದೆ.ಶನಿವಾರ ಬೆಳಗ್ಗೆ 10 ಗಂಟೆಗೆ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರುವುದು. ಸಾನ್ನಿಧ್ಯವನ್ನು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮಿಗಳು ವಹಿಸುವರು. ಘನ ಉಪಸ್ಥಿತಿಯನ್ನು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಲಲಿತಾ ಕೆರಿಮನಿ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಶಾಸಕ ಡಿ.ಆರ್. ಪಾಟೀಲ ಸಾಹಿತ್ಯ ಕೃತಿಗಳ ಬಿಡುಗಡೆಗೊಳಿಸುವರು. ಶಾಸಕ ಜಿ.ಎಸ್. ಪಾಟೀಲ ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು. ಮಳಿಗೆಗೆಳ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ನೆರವೇರಿಸುವರು. ಸಮ್ಮೇಳನಾಧ್ಯಕ್ಷರ ಭಾಷಣದ ಪ್ರತಿಯನ್ನು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಬಿಡುಗಡೆ ಮಾಡುವರು.