ಕನ್ನಡಪ್ರಭ ವಾರ್ತೆ ಮಂಡ್ಯ
ಬಿಡದಿಯ ತಮ್ಮ ತೋಟದಲ್ಲಿ ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದ ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ಡಿ.ಸಿ.ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಕೆ.ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಶಾಸಕ ಎಚ್.ಟಿ.ಮಂಜು, ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ ಪಾಲ್ಗೊಂಡಿದ್ದರು.
ಪಕ್ಷಕ್ಕೆ ಹಾನಿಯಾಗುವಂತೆ ನಡೆದುಕೊಳ್ಳಬೇಡಿ:ಸಣ್ಣಪುಟ್ಟ ವೈಮನಸ್ಸು ಇದ್ದರೆ ಮೊದಲು ಬಿಡಿ. ಅದರಿಂದ ಪಕ್ಷದ ಬೆಳವಣಿಗೆಗೆ ಧಕ್ಕೆ ಆಗಲಿದೆ. ಯಾರೂ ಪಕ್ಷಕ್ಕೆ ಹಾನಿಯಾಗುವ ರೀತಿ ನಡೆದುಕೊಳ್ಳಬಾರದು. ಏನೇ ಸಮಸ್ಯೆ ಇದ್ದರೂ ಸೌಹಾರ್ದಯುತವಾಗಿ ಸಭೆ ನಡೆಸಿ ಬಗೆಹರಿಸಿಕೊಳ್ಳಿ. ಪಕ್ಷ ಸಂಘಟನೆ ಹಾಗೂ ಸಾಂಸ್ಥಿಕ ನೇಮಕಗಳಲ್ಲಿ ಗುರುತರ ಬದಲಾವಣೆಗಳು ಆಗಲಿವೆ. ಮುಂದಿನ ದಿನಗಳಲ್ಲಿ ಪಕ್ಷದ ವರ್ಚಸ್ಸು, ಬೆಳವಣಿಗೆ ದೃಷ್ಟಿಯಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಆಂತರಿಕ ಕಚ್ಚಾಟ, ಆಡಳಿತ ವಿರೋಧಿ ಅಲೆ ಸರ್ಕಾರವನ್ನು ಬಾಧಿಸುತ್ತಿದೆ. ಇಂತಹ ಸಮಯದಲ್ಲಿ ನೀವೆಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಖಂಡಾತುಂಡವಾಗಿ ಹೇಳಿದರು.
ಪಕ್ಷವನ್ನು ಯಾರೂ ಲಘುವಾಗಿ ತೆಗೆದುಕೊಳ್ಳಬೇಡಿ. ಪಕ್ಷವಿದ್ದರಷ್ಟೇ ನಾವು ಎಂಬುದನ್ನು ಮರೆಯಬಾರದು. ಸಂಘಟನೆಯಲ್ಲಿ ಬದ್ಧತೆಯಿಂದ ಗಂಭೀರವಾಗಿ ತೊಡಗಿಸಿಕೊಳ್ಳಿ. ಜನಪರ ಕಾರ್ಯಕ್ರಮಗಳನ್ನು ರೂಪಿಸಿ. ರಾಜ್ಯ ಸರ್ಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಜಿಲ್ಲೆಯ ರೈತರು ಇನ್ನಿಲ್ಲದ ಸಂಕಷ್ಟದಲ್ಲಿದ್ದಾರೆ. ಮುಖ್ಯವಾಗಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಲ್ಲಿ ನಿಗದಿತ ಪ್ರಮಾಣದಲ್ಲಿ ಕಬ್ಬು ಅರೆಯದ ಕಾರಣ ಸಮಸ್ಯೆಗೆ ಸಿಲುಕಿದ್ದಾರೆ. ಇಂತಹ ಸನ್ನಿವೇಶದಲ್ಲಿ ಜಿಲ್ಲೆಯೊಳಗೆ ನಿಮ್ಮೆಲ್ಲರ ಜವಾಬ್ದಾರಿ ಹೆಚ್ಚಿದೆ. ಸದಾ ಜನರ ಜೊತೆಯಾಗಿ ನಿಂತು ಕೆಲಸ ಮಾಡುವಂತೆ ಸೂಚಿಸಿದರು.
ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮುಖಂಡರ ಜತೆ ಕೂಲಂಕಷವಾಗಿ ಚರ್ಚೆ ನಡೆಸಿದ ಸಚಿವರು, ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿ, ಪಕ್ಷದ ಹಿನ್ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿಯವರೆಗೂ ನಡೆದದ್ದು ನಡೆದುಹೋಗಿದೆ. ಇನ್ನು ಮುಂದೆ ಹಾಗಾಗುವುದು ಬೇಡ. ಪಕ್ಷದ ಸಂಘಟನೆ ವಿಚಾರವಾಗಿ ಯಾರೂ ಆಲಕ್ಷ್ಯ ಮಾಡಬಾರದು. ಕಳೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ಬಹುಮತದಲ್ಲಿ ಜಿಲ್ಲೆಯ ಜನತೆ ನಮ್ಮನ್ನು ಆಶೀರ್ವಾದ ಮಾಡಿದ್ದಾರೆ. ಅಧಿಕಾರವಿರಲಿ, ಇಲ್ಲದಿರಲಿ. ಜನರ ಜತೆ ನೀವು ಸದಾ ಇರಬೇಕು. ಅವರ ನಿರೀಕ್ಷೆಯನ್ನು ಹುಸಿ ಮಾಡಬಾರದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸಂಘಟನಾ ಪ್ರವಾಸ ಮುಗಿದಿದೆ. ಅದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಆನಂತರ ನೀವು ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆಯೊಳಗೆ ಸದಸ್ಯತ್ವ ನೋಂದಣಿ ಮಾಡಿಸಬೇಕು. ಗ್ರಾಮ ಗ್ರಾಮದಲ್ಲಿಯೂ, ಮನೆ ಮನೆಯಲ್ಲಿಯೂ ಪಕ್ಷದ ಕಾರ್ಯಕರ್ತರು ಇರಬೇಕು ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ: