ಚನ್ನಪಟ್ಟಣ: ಕಾನೂನು ಅರಿವು ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಹದಿಹರೆಯದ ಹೆಣ್ಣು ಮಕ್ಕಳು ತಮ್ಮ ಹಕ್ಕುಗಳು, ಸುರಕ್ಷತೆ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಸಹನಾ ಪಾಟೀಲ್ ಹೇಳಿದರು.
ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು, ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳದಿರುವುದು ಮತ್ತು ಯಾವುದೇ ಸಮಸ್ಯೆ ಎದುರಾದಾಗ ಭಯಪಡದೆ ಸೂಕ್ತ ನೆರವು ಪಡೆಯಬೇಕು. ನಾನು ಸರ್ಕಾರಿ ಶಾಲೆಯಲ್ಲಿ ಓದಿ, ಕಷ್ಟಪಟ್ಟು ಅಧ್ಯಯನ ಮಾಡಿ ಸಬ್ಇನ್ಸ್ಪೆಕ್ಟರ್ ಆಗಿದ್ದೇನೆ. ಶ್ರದ್ಧೆಯಿಂದ ಓದಿದರೆ ಜೀವನದಲ್ಲಿ ಸಾಧನೆ ಮಾಡಬಹುದು. ಕೌಟುಂಬಿಕ ಅಥವಾ ಆರ್ಥಿಕ ಪರಿಸ್ಥಿತಿ ಸಾಧನೆಗೆ ಅಡ್ಡಿಯಾಗುವುದಿಲ್ಲ. ಸರ್ಕಾರ ಹಾಗೂ ಸಮಾಜದಲ್ಲಿ ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಗುರಿ ಸಾಧಿಸಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಯೋಗೇಶ್ ಚಕ್ಕೆರೆ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣದ ಜತೆಗೆ ಆತ್ಮವಿಶ್ವಾಸ, ಧೈರ್ಯ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಹೊಂದಿರಬೇಕು. ವಸತಿ ನಿಲಯದಲ್ಲಿ ದೊರೆಯುತ್ತಿರುವ ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ವಿವಿಧ ತರಬೇತಿಗಳ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಗುರಿ ಸಾಧಿಸಬೇಕು ಎಂದು ಹೇಳಿದರು.ತಗಚಗೆರೆ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದ ಜತೆಗೆ ಉತ್ತಮ ಮೌಲ್ಯಗಳು, ಮಾನವೀಯತೆ, ಶಿಸ್ತು, ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು. ಉತ್ತಮ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರಾದ ಮಧು ಹಾಗೂ ಗಾನವಿಯನ್ನು ಅಭಿನಂದಿಸಲಾಯಿತು.
ಚನ್ನಪಟ್ಟಣ ತಾಲೂಕಿನ ಚಕ್ಕೆರೆಯ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಸಹನಾ ಪಾಟೀಲ್ ಉದ್ಘಾಟಿಸಿದರು.