
ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಎಸ್ಐಟಿ ಕ್ಯಾಂಪಸ್ನಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆ, ಶ್ರೀ ಕೃಷ್ಣ ಕಾನೂನು ಕಾಲೇಜು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಗಿಡಗಳಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನನ್ನು ಪ್ರತಿಯೊಬ್ಬರೂ ಅರಿತಿರಬೇಕು. ನಾವು ತಾಯಿಯ ಹೊಟ್ಟೆಯಲ್ಲಿ ಇರುವಾಗಲೇ ಕಾನೂನು ರಕ್ಷಣೆಯ ಹಕ್ಕನ್ನು ಪಡೆದುಕೊಂಡಿರುತ್ತೇವೆ. ಪ್ರತಿಯೊಬ್ಬರಿಗೂ ಈ ಹಕ್ಕು ತಾವು ಸಾಯುವವರೆಗೂ ಇರುತ್ತದೆ. ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವುದು ಕಾನೂನು ಪ್ರಕಾರ ತಪ್ಪು. ಒಂದು ವೇಳೆ ಹಾಗೆ ಮಾಡಿದಲ್ಲಿ ಅವರು ಕಾನೂನಿನಲ್ಲಿ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದರು.ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯ ಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರು ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ನಮ್ಮ ಕೂಡಲ ಸಂಗಮ ದೇವರನೊಲಿಸುವ ಪರಿ ಎಂದು ಹನ್ನೆರಡನೇ ಶತಮಾನದಲ್ಲಿಯೇ ಬಸವಣ್ಣನವರು ಕಾನೂನು ಒಳಗೊಂಡಂತೆ ತಮ್ಮ ವಚನದಲ್ಲಿ ಸಾಮಾನ್ಯ ಜ್ಞಾನವನ್ನು ತಿಳಿಸಿದ್ದಾರೆ. ಕಾನೂನು ಎನ್ನುವುದು ಒಂದು ಸಾಮಾನ್ಯ ಜ್ಞಾನ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಾಲೆ ಮಾತನಾಡಿ, ಬಾಲ್ಯ ವಿವಾಹವು ಕಾನೂನು ರೀತ್ಯ ಅಪರಾಧವಾಗಿದ್ದು, ಇದನ್ನು ತಡೆಗಟ್ಟಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಪ್ರತಿಯೊಬ್ಬರಿಗೂ ಕಾನೂನು ಅರಿವು- ನೆರವು ಮೂಡಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹೊಣೆಯಾಗಿದೆ. ಇಲ್ಲಿ ಉಚಿತವಾಗಿ ಸಲಹೆಗಳನ್ನು ನೀಡಲಾಗುತ್ತದೆ. ಕಾನೂನಿನ ಅವಶ್ಯಕತೆ ಯಾರಿಗೆಲ್ಲ ಇದೆಯೋ ಅವರಿಗೆಲ್ಲ ನೆರವು ನೀಡುವ ಉದ್ದೇಶ ನಮ್ಮ ಪ್ರಾಧಿಕಾರದ್ದಾಗಿದೆ. ಎಲ್ಲರೂ ಇದರ ನೆರವನ್ನು ಪಡೆಯಬೇಕು ಎಂದು ತಿಳಿಸಿದರು.
ಅತಿಥಿಗಳಾಗಿ ಆಗಮಿಸಿದ್ದ ತುಮಕೂರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಸೌಮ್ಯ ಜಿ.ಎಲ್., ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೊಳಗಾದವರು ಶಿಕ್ಷಣದಿಂದ ವಂಚಿತರಾಗುತ್ತಾರೆ. ಇದರಿಂದ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಶಿಕ್ಷಣದತ್ತ ಹೆಚ್ಚಿನ ಗಮನಕೊಡಿ. ಮೊಬೈಲ್, ಮೀಡಿಯಾಗಳಲ್ಲಿ ತೋರಿಸುವ ಅಶ್ಲೀಲ ಚಿತ್ರಗಳನ್ನು ನೋಡಿ ಪ್ರಚೋದಿತರಾಗಿ ಅಪರಾಧಗಳನ್ನು ಎಸಗಿದರೆ ಕಾನೂನಿಡಿಯಲ್ಲಿ ಶಿಕ್ಷೆಗೊಳಬೇಕಾಗುತ್ತದೆ. ಕಾನೂನು ಎನ್ನುವುದು ಎಲ್ಲರಿಗೂ ಒಂದೇಯಾಗಿರುತ್ತದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಎನ್ಸಿಸಿ ಮುಖ್ಯಸ್ಥ ಅನಿಲ್ಕುಮಾರ, 4 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಜೆಸಿಒ ಯೋಗೀಶ್ ಕೆ.ಡಿ., ಶ್ರೀ ಕೃಷ್ಣ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನೆಟ್ ವಿಮಲ, ಆಯುಷ್ಮಾನ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ, ಸಹ ಪ್ರಾಧ್ಯಾಪಕರಾದ ರಾಜೇಶ್ವರಿ, ಸುಮಿತ್ರಾ ಪಾಟೀಲ್, ಸ್ವಾತಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಶರತ್ ತಂಡದ ವತಿಯಿಂದ ಬಾಲ್ಯ ವಿವಾಹ ಕುರಿತು ಕಾನೂನು ಅರಿವು ಮೂಡಿಸುವ ನಾಟಕವನ್ನು ಪ್ರದರ್ಶಿಸಲಾಯಿತು.