ಕನ್ನಡಪ್ರಭ ವಾರ್ತೆ ತುಮಕೂರುಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ನ್ಯಾ. ನೂರುನ್ನಿಸಾ ತಿಳಿಸಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ವರ್ಷಗಳ ಹಿಂದೆ ಕುಷ್ಠರೋಗವು ಯಾವುದೇ ಔಷಧೋಪಚಾರವಿಲ್ಲದೆ ಗುಣಮುಖವಾಗದ ಖಾಯಿಲೆಯಾಗಿತ್ತು. ಕುಷ್ಠರೋಗಿಗಳನ್ನು ಅಸ್ಪ್ರಶ್ಯರಂತೆ ಕಾಣುವ ವ್ಯವಸ್ಥೆಯಿತ್ತು. ಪ್ರಸ್ತುತ ಕುಷ್ಠರೋಗಕ್ಕೆ ಉಚಿತ ಔಷಧಿ ಲಭ್ಯವಿದ್ದು, ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರಿಂದ ಕುಷ್ಠರೋಗದಿಂದ ಗುಣಮುಖ ಹೊಂದಬಹುದು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ ಹಿಂದಿನ ಕಾಲದಲ್ಲಿ ಕುಷ್ಠರೋಗವನ್ನು ಶಾಪಗ್ರಸ್ಥ ರೋಗವೆಂದು ಪರಿಗಣಿಸಲಾಗುತ್ತಿತ್ತು. ಜಿಲ್ಲೆಯ ಇತರೆ ತಾಲೂಕುಗಳಿಗಿಂತ ಶಿರಾ, ಪಾವಗಡ, ಮಧುಗಿರಿ ತಾಲೂಕಿನಲ್ಲಿ ಕುಷ್ಠರೋಗ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಆರೋಗ್ಯ ಇಲಾಖೆಯಿಂದ ಕುಷ್ಠ ರೋಗಿಗಳಿಗೆ ಉಚಿತವಾಗಿ ಪೌಷ್ಟಿಕಾಂಶ ಔಷಧಿ, ಎಂಸಿಆರ್ ಚಪ್ಪಲಿ, ಕೈಕಾಲುಗಳಿಗೆ ಗ್ರಿಪ್ ಸೇರಿದಂತೆ ಅನೇಕ ಉಪಕರಣಗಳನ್ನು ನೀಡಲಾಗುತ್ತಿದೆ ಎಂದರು.