ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಕೃಷಿ ಸಂಶೋಧನೆಗಳು ರೈತರಿಗೆ ಸಹಕರಿಸುವಂತಾಗಲಿ: ಕುಲಪತಿ ಡಾ.ಪಿ.ಎಲ್.ಪಾಟೀಲ್

KannadaprabhaNewsNetwork | Published : Aug 13, 2024 1:02 AM

ರಾಯಚೂರಿನ ಕೃಷಿ ವಿವಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ವಿದ್ಯಾರ್ಥಿಗಳು ಕೈಗೊಳ್ಳುವ ಸಂಶೋಧನೆಗಳು ರೈತರಿಗೆ ಉಪಯೋಗ ಆದಾಗ ಮಾತ್ರ ಸಂಶೋಧನೆಗಳು ಸಾರ್ಥಕತೆ ಪಡೆದುಕೊಳ್ಳುತ್ತವೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕೃಷಿ ವಿವಿ ಸ್ನಾತಕೋತ್ತರ ನಿರ್ದೇಶನಾಲಯದಡಿ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆಯುವ ಅಂತಿಮ ಘಟ್ಟದಲ್ಲಿರುವ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾದ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.

ಕೃಷಿ ವಿಶ್ವವಿದ್ಯಾಲಯಗಳು ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸದಾ ಸ್ಪಂದಿಸಬೇಕು. ಹವಾಮಾನ ವೈಪರೀತ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳ ಕ್ಷೀಣಿಸುವಿಕೆಗಳು ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು. ಆದ್ದರಿಂದ, ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು ಅದರಲ್ಲೂ ಯುವ ಸಂಶೋಧನಾ ವಿದ್ಯಾರ್ಥಿಗಳು ಇಂತಹ ಅತಿವೃಷ್ಟಿ ಮತ್ತು ಅನಾವೃಷ್ಟಿಗಳನ್ನು ಅರಿತುಕೊಂಡು ಅವುಗಳ ನಿರ್ವಹಣೆಗೆ ಸ್ಪಂದನೆಯಾಗುವ ಸಂಶೋಧನೆ ಕೈಗೊಂಡು ರೈತಬಾಂಧವರಿಗೆ ಸದಾ ಆಸರೆಯಾಗಬೇಕು ಎಂದರು.

ವಿವಿಗಳೂ ಕೂಡ ಯುವ ವಿಜ್ಞಾನಿಗಳನ್ನು ತಯಾರು ಮಾಡಬೇಕೆಂದು ಕರೆ ಕೊಟ್ಟರು. ಎರಡನೆಯದಾಗಿ, ಮಣ್ಣಿನ ಕ್ಷೀಣಿಸುವಿಕೆ ಜೊತೆಗೆ ನೀರಿನ ಅಭಾವ ಇವೆರಡನ್ನು ನಿರ್ವಹಿಸಿಕೊಂಡು ಹೋಗುವಂತಹ ಜೈವಿಕ ವೈವಿದ್ಯಯತೆ ಕಾಪಾಡಿಕೊಳ್ಳುವಲ್ಲಿ ಹತ್ತಿರವಾಗುವ ಸಂಶೋಧನೆಗಳನ್ನು ಕೈಗೊಳ್ಳಲು ಕಿವಿಮಾತು ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಶಿಕ್ಷಣ ಮತ್ತು ಅದಕ್ಕೆ ಸಂಬಂಧಿಸಿದ ಪಠ್ಯ ವಿಷಯಗಳನ್ನು ಆಗಿಂದಾಗ್ಗೆ ಪರಾಮರ್ಶಿಸಿ ಕೃಷಿ ಶಿಕ್ಷಣದಲ್ಲಿ ಸುಧಾರಣೆ ತರಬೇಕೆಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ವಹಿಸಿ ಮಾತನಾಡಿ, ರೈತರ ಅಭ್ಯುದಯವನ್ನಿಟ್ಟುಕೊಂಡು ವಿದ್ಯಾರ್ಥಿಗಳು ಸಂಶೋಧನೆಗಳನ್ನು ಕೈಗೊಳ್ಳಬೇಕು. ಹಾಗೂ ಶಿಕ್ಷಕರು ಈ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡಬೇಕು ಎಂದರು. ಕೃಷಿಯನ್ನು ಲಾಭದಾಯಕವಾಗಿ ಮಾಡುವ ನಿಟ್ಟಿನಲ್ಲಿ ಕೃಷಿ ಹಾಗೂ ಕೃಷಿ ಎಂಜನಿಯರಿಂಗ್ ತಾಂತ್ರಿಕತೆಗಳನ್ನು ಸಂಶೋಧಿಸಿ, ಬೆಳೆಸಿ ರೈತರ ಉಪಯೋಗಕ್ಕಾಗಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ, ಅಧಿಕಾರಿ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.