ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಮೂಡಿಗೆರೆ, ದಾವಣಗೆರೆ, ಬೆಳಗಾವಿ, ಬೆಂಗಳೂರು ಮತ್ತು ಮಂಡ್ಯದಲ್ಲಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.ನಗರದ ನವುಲೆ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿರುವ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ " ಶೀರ್ಷಿಕೆ ಅಡಿಯಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶವನ್ನು ಏರ್ಪಡಿಸಲಾಗಿದ್ದು, ಭತ್ತದ ಮತ್ತು ಇತರೆ ಉತ್ತಮ ತಳಿಗಳನ್ನು ಬಿಡುಗಡೆಗೊಳಿಸಲಾಗಿದೆ. ರೈತರಿಗೆ ವಿಶ್ವವಿದ್ಯಾಲಯ ನೀಡಾಬೇಕಾಗಿರುವುದು ಇದನ್ನೇ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು, ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್ ಸಂಸ್ಥೆಯು ರಾಜ್ಯದಲ್ಲಿ 5 ಸಾವಿರ ಘಟಕಗಳಿಗೆ ಸಬ್ಸಿಡಿ ನೀಡಿದೆ. ರೈತರಿಗೆ ಎಂಒ 4 ತಳಿಯನ್ನು ನೀಡಲು ಕೃಷಿ ಇಲಾಖೆ ಮತ್ತು ವಿಶ್ವವಿದ್ಯಾಲಯಗಳು ಬದ್ದವಾಗಿದೆ ಎಂದರು.ಫಿಲಿಫೈನ್ಸ್ ದೇಶದಲ್ಲಿ ಸುಮಾರು 25 ರಿಂದ 30 ದಿನಗಳ ಕಾಲ ಮಳೆ ನಿರಂತರವಾಗಿ ಬಂದರೂ ಹಾನಿಯಾಗದಂತಹ ಭತ್ತದ ತಳಿಯನ್ನು ಕಂಡು ಹಿಡಿದಿದ್ದು, ಮುಂದಿನ ದಿನಗಳಲ್ಲಿ ನಮ್ಮ ವಿಜ್ಞಾನಿಗಳೂ ರೈತರಿಗೆ ಇಂತಹ ತಳಿಗಳನ್ನು ಸಂಶೋಧಿಸಿ ನೀಡುವರು ಎಂದು ಭರವಸೆ ವ್ಯಕ್ತಪಡಿಸಿದರು.
ಮಲೆನಾಡಿನಲ್ಲಿ ಅಡಕೆ ಬೆಳೆ ಹೆಚ್ಚಾಗಿದೆ. 20 ರಿಂದ 27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆ ಹೆಚ್ಚಾಗಿದೆ. ಕಳೆದ ಬಾರಿ ಮಳೆಗೆ 13 ರಿಂದ 16 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಸಂಭವಿಸಿದ್ದು, ಎನ್ಡಿಆರ್ಎಫ್ ಪರಿಹಾರದ ಜೊತೆಗೆ ರಾಜ್ಯ ಸರ್ಕಾರ 8.5 ರು. ಸಾವಿರ ಪರಿಹಾರ ನೀಡುತ್ತಿದೆ. ರೈತರ ಆದಾಯ ಹೆಚ್ಚಿಸಲು ಸರ್ಕಾರ ಎಲ್ಲ ರೀತಿಯಿಂದ ಸಹಕರಿಸುತ್ತಿದ್ದು, ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಉತ್ತಮ ಬೆಲೆ ಪಡೆಯಬೇಕು ಎಂದು ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಇರುವಕ್ಕಿಯಲ್ಲಿ 255 ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದು ಇದಕ್ಕೆ ಅಗತ್ಯವಾದ ಪೀಠೋಪಕರಣಕ್ಕೆ 10 ಕೋಟಿ ರು. ಅನುದಾನದ ಅವಶ್ಯಕತೆ ಇದೆ. ಹಾಗೂ 2013 ರಿಂದ ಇಲ್ಲಿಯವರೆಗೆ ವಿಶ್ವವಿದ್ಯಾಯದಲ್ಲಿ ಯಾವುದೇ ಹುದ್ದೆಗಳು ಭರ್ತಿಯಾಗಿಲ್ಲ, ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವಂತೆ ಮನವಿ ಮಾಡಿದರು.
ಇದೇ ವೇಳೆ ಉತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ವಿತರಣೆ ಮಾಡಿ ಗೌರವಿಸಲಾಯಿತು.ಶಾಸಕಿ ಶಾರದಾ ಪೂರ್ಯನಾಯ್ಕ ಅಧ್ಯಕ್ಷತೆ ವಹಿಸಿದ್ದರು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್ , ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಎಸ್.ಆರ್ ಮಜುನಾಥ ಗೌಡ, ಡಾ.ಹನುಮಂತಪ್ಪ, ಆಡಳಿತ ಮಂಡಳಿ ಸದಸ್ಯರಾದ ಬಿ.ಕೆ ಕುಮಾರಸ್ವಾಮಿ, ಜೆ ಜೆ ಕಾವೇರಪ್ಪ, ದೇವಿಕುಮಾರ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ರಾಮಕೃಷ್ಣ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ, ವಿವಿಧ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಮತ್ತಿತರರು ಇದ್ದರು.