ಗೋಕರ್ಣ: ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ರಾಘವೇಶ್ವರ ಭಾರತೀ ಸ್ವಾಮಿಗಳು ನುಡಿದರು.ಅಶೋಕೆಯ ಮೂಲಮಠದಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಮಂಗಳವಾರದ ಧರ್ಮಸಭೆಯಲ್ಲಿ ಅನ್ನಂ ಬ್ರಹ್ಮ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಉತ್ತಮವಾದದ್ದನ್ನು ಕೆಡಿಸಿ, ಹಾನಿಕಾರಕವಾದುದನ್ನು ಸಮಾಜಕ್ಕೆ ಕೊಡುವುದೇ ಕಲಿಯುಗದ ಲಕ್ಷಣ. ಪ್ಲಾಸ್ಟಿಕ್, ಕೃತಕ ವಸ್ತುಗಳು ಅತ್ಯಂತ ಹಾನಿಕಾರಕ ಎಂದು ವಿಜ್ಞಾನವೇ ಒಪ್ಪಿಕೊಂಡಿದ್ದರೂ ಅವುಗಳ ಉತ್ಪಾದನೆ ಮತ್ತು ಬಳಕೆ ನಿಲ್ಲುತ್ತಿಲ್ಲ ಎಂದರು.ಮನುಷ್ಯನ ಆಲೋಚನೆ ಆಹಾರವನ್ನು ಅವಲಂಬಿಸಿದೆ. ಆಹಾರದ ಮೇಲೆ ಪಾತ್ರೆಗಳು ಪರಿಣಾಮವನ್ನು ಬೀರುತ್ತದೆ. ಇಂದು ನಮ್ಮ ಮನೆಗಳಲ್ಲಿ ಪಾರಂಪರಿಕ ತಾಮ್ರ, ಹಿತ್ತಾಳೆ ಹಾಗೂ ಕಂಚಿನ ಪಾತ್ರೆಗಳು ಮನೆಯ ಮೆತ್ತನ್ನು ಸೇರಿದೆ. ಅವುಗಳನ್ನು ಬಳಸುತ್ತಲೇ ಇಲ್ಲ. ಒಂದೆರಡು ತಲೆಮಾರಿನ ಹಿಂದೆ ಬಡತನ ಇತ್ತಾದರೂ ಅವರು ಸೂಕ್ತವಾದ ಲೋಹದ ಪಾತ್ರೆಗಳನ್ನೇ ಬಳಸುತ್ತಿದ್ದರು ಎಂದರು.