ಸಂಡೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ವಾರದಲ್ಲಿ ೬ ದಿನವೂ ಪೂರಕ ಪೌಷ್ಠಿಕ ಆಹಾರ ವಿತರಿಸಲು ₹೧೫೯೧ ಕೋಟಿ ಆರ್ಥಿಕ ಸಹಾಯ ಒದಗಿಸಿರುವ ಅಜಿಮ್ ಪ್ರೇಮ್ಜಿ ಫೌಂಡೇಶನ್ಗೆ ಅಭಿನಂದನೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣದೊಂದಿಗೆ ದೇಶದ ಆಸ್ತಿಯಾಗಬೇಕು ಎಂದು ಸಂಸದ ಈ. ತುಕಾರಾಂ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ವಾರದ ೬ ದಿನವೂ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.ಸರ್ಕಾರಿ ಶಾಲೆಯಲ್ಲಿ ಬಾಲ್ಯದಲ್ಲಿ ನೀಡುತ್ತಿದ್ದ ಉಪ್ಪಿಟ್ಟನ್ನು ಆಸ್ವಾದಿಸಿದನ್ನು ಮೆಲುಕು ಹಾಕಿದ ಸಂಸದರು, ಈ ಯೋಜನೆಯ ಲಾಭವನ್ನು ತಾಲೂಕಿನಲ್ಲಿ ೩೨ ಸಾವಿರ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ. ಈ ಯೋಜನೆಗೆ ತಾಲೂಕಿನಲ್ಲಿ ₹೧.೭೬ ಕೋಟಿ ಖರ್ಚಾಗಲಿದೆ. ಮಕ್ಕಳು ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು. ಮಕ್ಕಳಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರ ಕ್ಷೀರಭಾಗ್ಯ, ರಾಗಿ ಮಾಲ್ಟ್, ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆಯನ್ನು ರೂಪಿಸಿದೆ. ವಿದ್ಯಾರ್ಥಿಗಳು ಆಟದ ಜೊತೆಗೆ ಗುಣಾತ್ಮಕ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆದು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು. ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರ ೨೦೦೨-೨೩ರಲ್ಲಿ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಜಾರಿಗೆ ತಂದಿತು. ನಂತರದಲ್ಲಿ ಕ್ಷೀರಭಾಗ್ಯ, ವಾರದಲ್ಲಿ ೨ ದಿನ ಮೊಟ್ಟೆ ನೀಡುವುದು, ನಂತರದಲ್ಲಿ ಹಾಲಿನ ಜೊತೆಗೆ ರಾಗಿ ಮಾಲ್ಟ್ ವಿತರಣೆ ಹಾಗೂ ಪ್ರಸಕ್ತ ವರ್ಷದಲ್ಲಿ ವಾರದ ೬ ದಿನ ಪೌಷ್ಠಿಕ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಪುರಸಭೆ ಅಧ್ಯಕ್ಷ ಸಿರಾಜ್ ಹುಸೇನ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ, ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿಯವರು ಮಾತನಾಡಿದರು.ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿರುವ ಸಂಸದ ಈ. ತುಕಾರಾಂ ಅವರನ್ನು ಅಭಿನಂದಿಸಲಾಯಿತು.
ಪುರಸಭೆ ಉಪಾಧ್ಯಕ್ಷೆ ಎಂ.ಸಿ. ಲತಾ ಉಜ್ಜಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚೌಕಳಿ ಪರಶುರಾಮಪ್ಪ, ಜಗದೀಶ್, ಎಸ್.ವಿ. ಹಿರೇಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಂಡೂರಿನ ಗುರುಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಂಸದ ತುಕಾರಾಂ ಶಾಲಾ ಮಕ್ಕಳಿಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣಗಳ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.