ಭದ್ರಾವತಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅಪಾರ ಕೊಡುಗೆ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರದಲ್ಲಿ ನನ್ನನ್ನು ೪ ಬಾರಿ ಗೆಲ್ಲಿಸುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅದೇ ರೀತಿ, ಈ ಬಾರಿ ಪಕ್ಷದ ಲೋಕಸಭಾ ಅಭ್ಯರ್ಥಿ ಗೀತಾ ಅವರಿಗೂ ಅವಕಾಶ ಮಾಡಿಕೊಡಿ ಎಂದರು.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ, ಸಾಮಾನ್ಯ ಜನರು ಉಸಿರಾಡುಂತಹ ವಾತಾವರಣ ಸೃಷ್ಟಿಸಿ ಹೋಗಿದ್ದಾರೆ. ಅದರ ಋಣ ತೀರಿಸಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡಿದೆ. ಇಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳು ಮಾತ್ರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ, ಬಿಜೆಪಿ ಆಡಳಿತಕ್ಕೆ ಬಂದು ದಶಕ ಮಾತ್ರ ಕಳೆದಿವೆ. ಇಲ್ಲಿ ಬಿಜೆಪಿ ಆಡಳಿತದಿಂದ ದೇಶ ದುಃಸ್ಥಿತಿಗೆ ತಲುಪಿದೆ ಎಂದು ದೂರಿದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಕರ್ನಾಟಕ ಸಾಂಬಾರು ಮಂಡಳಿ ಅಧ್ಯಕ್ಷೆ ಜಿ.ಪಲ್ಲವಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಲ್ಕೀಷ್ ಬಾನು, ಎಸ್.ಮಣಿಶೇಖರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಸದಸ್ಯ ವೈ.ಎಚ್.ನಾಗರಾಜ್, ನಗರಸಭೆ ಸದಸ್ಯ ಬಿ.ಕೆ.ಮೋಹನ್, ಯುವ ಮುಖಂಡ ಬಿ.ಎಸ್.ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.