ಬಳ್ಳಾರಿ: ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಂಡಿರಬೇಕು. ಗ್ರಾಹಕರು ತಮಗೆ ಮೋಸವಾದಾಗ ಧೈರ್ಯದಿಂದ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ ಹೇಳಿದರು.
ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಗ್ರಾಹಕರು ತಾವು ಖರೀದಿಸುವ ವಸ್ತುಗಳ ಗುಣಮಟ್ಟ, ಪ್ರಮಾಣದ ಬಗ್ಗೆ ಗಮನಹರಿಸಬೇಕು. ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯು ವರ್ತಕರ ಹಾಗೂ ಗ್ರಾಹಕರ ಮಧ್ಯೆ ವಂಚನೆಯಾಗದಂತೆ ಕಾರ್ಯ ನಿರ್ವಹಿಸಲು ಅಭಿವೃದ್ಧಿ ಪಡಿಸುತ್ತಿದ್ದು, ಇದು ಹೆಚ್ಚು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ ಗ್ರಾಹಕರ ಹಕ್ಕುಗಳ ಪರವಾಗಿ ಧ್ವನಿಯೆತ್ತಿ ಕಾನೂನಾತ್ಮಕವಾಗಿ ನ್ಯಾಯ ಪಡೆದುಕೊಳ್ಳಬೇಕು ಎಂದರು.ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಎಂಜಿನಿಯರಿಂಗ್ ಮಹಾವಿದ್ಯಾಲಯದ ವಿಜ್ಞಾನ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಪ್ರಸಾದ ಕೆ.ಎಂ ಗ್ರಾಹಕರಿಗೋಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆ ಮಾರ್ಲಾ ಶಶಿಕಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರ್ರಿಗೌಡ, ಹಿರಿಯ ವಕೀಲರಾದ ಅಂಕಲಯ್ಯ, ಶ್ರೀಮೇದಾ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ರಾಮಕಿರಣ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನ್ಯಾಯಬೆಲೆ ಅಂಗಡಿಯ ಮಾಲೀಕರು ಮತ್ತಿತರರಿದ್ದರು.