ಕನ್ನಡಪ್ರಭ ವಾರ್ತೆ ದಾವಣಗೆರೆ
ವಿಧಾನಸೌಧ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಸಭಾಧ್ಯಕ್ಷರು ಮಾತನಾಡಲು ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಶಾಸಕ ಕೆ.ಎಸ್.ಬಸವಂತಪ್ಪ, ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ₹72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಬರ, ಅಂತರ್ಜಲ ಕುಸಿತದಿಂದಾಗಿ ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲಗಳ ಮನ್ನಾ ಹಾಗೂ ಬರ ಪರಿಹಾರದ ಹಣ ತಕ್ಷಣ ಬಿಡುಗಡೆಗೊಳಿಸಬೇಕು. ಈ ಬಗ್ಗೆ ರಾಜ್ಯದ ಸಂಸದರು, ವಿಧಾನಸಭೆ ವಿಪಕ್ಷ ನಾಯಕರು, ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಹೇರಿ, ಸಾಲ ಮನ್ನಾ ಮಾಡಿಸಬೇಕು ಎಂದು ಸಲಹೆ ನೀಡಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಹಿಂದೆ ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಆ ಸಮುದಾಯಕ್ಕೆ ಸೇರಬೇಕೆಂದು ದೇಶದಲ್ಲೇ ಮೊದಲ ಬಾರಿಗೆ ವಿಶೇಷ ಕಾಯ್ದೆ ತಂದಿತ್ತು. ಅದರಂತೆ ಆ ಸಮುದಾಯಕ್ಕೆ ಹಣ ಸಂದಾಯವಾಗುತ್ತಿದೆ. ಶೇ.5-6 ವ್ಯತ್ಯಾಸ ಇರಬಹುದು ಆದರೆ ಮುಂದಿನ ದಿನಗಳಲ್ಲಿ ಮೀಸಲಿಟ್ಟ ಹಣ ಸಂಪೂರ್ಣ ವಿನಿಯೋಗವಾಗಲಿದೆ ಎಂದು ತಿಳಿಸಿದರು.ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಮನೆಗೊಂದು ನಲ್ಲಿ ಅಳವಡಿಸಲಾಗಿದೆ. ಆದರೆ ಆ ನಲ್ಲಿಗಳಲ್ಲಿ ಬರುವ ನೀರು ಹಿಡಿಯಲು ಮಹಿಳೆಯರು ಕೂಲಿ ಕೆಲಸ ಬಿಟ್ಟು ಇಡೀ ದಿವಸ ನಿಲ್ಲುವ ಪರಿಸ್ಥಿತಿ ಬಂದಿದೆ. ಯಾವುದೇ ಯೋಜನೆಗಳ ಅನುಷ್ಠಾನಕ್ಕೆ ತಂದ ಮೇಲೆ ಜನರಿಗೆ ಉಪಯೋಗ ಆಗಬೇಕು. ಅದರಿಂದ ಇನ್ನಷ್ಟು ಸಮಸ್ಯೆಗಳಾಗಬಾರದು ಎಂದು ಕೆ.ಎಸ್.ಬಸವಂತಪ್ಪ ಹೇಳಿದರು.