ಶಿರಸಿ: ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಎಲ್ಲಿಯೂ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿಲ್ಲ. ಆದರೆ ಆ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಹೆಬ್ಬಾರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆಗ್ರಹಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಜೆಟ್ನಲ್ಲಿ ಹಣ ಮಂಜೂರಿ ಮಾಡಿತ್ತು. ಇದೇ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಾಚಿಯಾಗಬೇಕು. ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕಾರವಾರ ಜಿಲ್ಲಾಸ್ಪತ್ರಗೆ ₹೧೬೦ ಕೋಟಿ, ಶಿರಸಿ ಆಸ್ಪತ್ರೆಗೆ ₹೧೭೦ ಕೋಟಿ ಅನುದಾನ ನೀಡಿದ್ದರು. ಅತ್ಯಾಧುನಿಕವಾಗಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಬರಗಾಲದಿಂದ ರಾಜ್ಯದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸುಳ್ಳು ಆಶ್ವಾಸನೆ ಕಾಂಗ್ರೆಸ್ ನೀಡುತ್ತಿದೆ. ಸುಳ್ಳಿನ ಸರ್ಕಾರ ಮುಂದಿನ ದಿನಗಳಲ್ಲಿ ನಿರ್ನಾಮವಾಗಲಿದೆ ಎಂದು ರೂಪಾಲಿ ನಾಯ್ಕ ವಾಗ್ದಾಳಿ ನಡೆಸಿದರು.
ನರೇಂದ್ರ ಮೋದಿ ಇನ್ನೊಮ್ಮೆ ಪ್ರಧಾನಿಯಾಗಬೇಕೆಂದು ಪ್ರತಿ ತಾಲೂಕಿಗೆ ತೆರಳಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ನಮ್ಮ ನಾಯಕ, ಸಂಸದ ಅನಂತಕುಮಾರ ಹೆಗಡೆ ಮುಂದಿನ ದಿನಗಳಲ್ಲಿ ಪ್ರಚಾರಕ್ಕೆ ಇಳಿಯಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಇದ್ದರು.