ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕಾರ್ಯನಿರ್ವಹಿಸಲಿ: ಲಕ್ಷ್ಮೀ ಮಚ್ಚಿನ

KannadaprabhaNewsNetwork |  
Published : Nov 26, 2025, 02:45 AM IST
ಜಿಲ್ಲಾ‌ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ  ಅವರಿಗೆ ಸನ್ಮಾನ | Kannada Prabha

ಸಾರಾಂಶ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ಸನ್ಮಾನ ಸಮಾರಂಭ ನೆರವೇರಿತು.

ಕುಂದಾಪುರ: ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕೆಲಸ ಮಾಡುವಂತಾಗಬೇಕು. ಪತ್ರಕರ್ತರಲ್ಲಿ ಉತ್ಸಾಹ ಕಡಿಮೆಯಾದರೆ, ಉದಾಸೀನದ ಮನೋಭಾವ ಬೆಳೆದರೆ ನಾವು ಅರ್ಧ ಸತ್ತ ಹಾಗೆ. ಆದ್ದರಿಂದ ಯಾವುದೇ ಸುದ್ದಿಯನ್ನು ಈಗಲೇ ಮಾಡುವ, ಇವತ್ತೇ ಮಾಡುವ ನಮ್ಮಲ್ಲಿ ಉತ್ಸಾಹ ಇದ್ದರೆ ಮಾತ್ರ ನಾವು ಬೇಡಿಕೆಯ ಪತ್ರಕರ್ತರಾಗಿ ಉಳಿಯಲು ಸಾಧ್ಯ ಎಂದು ಜಿಲ್ಲಾ‌ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಹೇಳಿದರು.ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಬದಲಾವಣೆಯನ್ನು ಪತ್ರಕರ್ತರಿಂದ ಮಾಡಲು ಸಾಧ್ಯವಾಗುತ್ತದೆ. ಪತ್ರಕರ್ತರ ಸಂಘ ಮನೆ ಇದ್ದ ಹಾಗೆ. ಪತ್ರಕರ್ತರಿಂದ ಆಯೋಜಿಸಲ್ಪಟ್ಟ ಈ ಸಮಾರಂಭದ ಆತ್ಮೀಯ ಕ್ಷಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪತ್ರಕರ್ತರ ಒಗ್ಗಟ್ಟು ಮುರಿಯುವುದು ತುಂಬಾ ಸುಲಭವಾದರೂ ಕುಂದಾಪುರ ಸಂಘದಲ್ಲಿ ಇದೆಲ್ಲ ನಡೆಯುವುದಿಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದಾರೆ ಎಂದರು.

ಕಲಾಕ್ಷೇತ್ರ ಕುಂದಾಪುರ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಬದುಕು ಬಯಸಿದಂತಲ್ಲ, ಬಂದಂತೆ ಎಂಬ ಮಾತಿನಂತೆ ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು ಎಂದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಾನ್ ಡಿಸೋಜ ಅಭಿನಂದನಾ ಮಾತನಾಡಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ಭಂಡಾರ್‌ಕಾರ್ಸ್‌ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಪಸ್ಥಿತರಿದ್ದರು. ಇದೇ ಸಂದರ್ಭ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ನಜೀರ್ ಪೊಲ್ಯ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಕಾರ್ಯದರ್ಶಿ ಟಿ.ಲೋಕೇಶ ಆಚಾರ್ಯ ತೆಕ್ಕಟ್ಟೆ, ಜಿಲ್ಲಾ‌ ಕಾರ್ಯಕಾರಿ ಸಮಿತಿ ಸದಸ್ಯರಾಗಿ‌ ಆಯ್ಕೆಯಾದ ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಚಂದ್ರಮ ತಲ್ಲೂರು ಮತ್ತು ಯೋಗೀಶ್ ಕುಂಭಾಶಿ ಅವರನ್ನು ಗೌರವಿಸಲಾಯಿತು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಪತ್ರಕರ್ತ ಪ್ರಶಾಂತ ಪಾದೆ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ