ಗದಗ: ಕನ್ನಡಿಗರಾಗಿರುವ ನಾವು ಕನ್ನಡವನ್ನು ಹೆತ್ತ ತಾಯಿಯಂತೆ ಗೌರವಿಸಬೇಕು. ಇಂಗ್ಲಿಷ್ ಅನಿವಾರ್ಯವಾಗಿದ್ದರೂ ನಮ್ಮ ಆದ್ಯತೆ ಕನ್ನಡವಾಗಿರಲಿ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಕೆವಿಎಸ್ಆರ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಆರ್. ಜಾಲಿಹಾಳ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯುವ ಜತೆಗೆ ನಮ್ಮ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದೋಣ ಎಂದರು.
ಅಲ್ಲಮಪ್ರಭು ಬೆಟ್ಟದೂರ ಮಾತನಾಡಿ, ಗುರುವಿರಲಿ, ಜಂಗಮವಿರಲಿ, ಲಿಂಗವಿರಲಿ ಎಲ್ಲವೂ ಕಾಯಕದ ಹೊಳಹು. ಕಾಯಕದಲ್ಲಿ ತರತಮ ಸಲ್ಲದು. ಶರಣರು ದೈಹಿಕ ಮತ್ತು ಬೌದ್ಧಿಕ ಎಲ್ಲ ಕಾಯಕಗಳು ಸಮಾನ ಎಂದು ತಿಳಿಸಿಕೊಟ್ಟಿದ್ದಾರೆ. ಜ್ಞಾನಕ್ಕಿಂತ ಮುಖ್ಯವಾದುದು ಕ್ರಿಯಾಜ್ಞಾನ. ಪಡೆದುಕೊಂಡಂತಹ ಜ್ಞಾನವನ್ನು ಅಳವಡಿಸಿಕೊಳ್ಳದೆ ಹೋದರೆ ಜ್ಞಾನಕ್ಕೆ ಅರ್ಥವಿಲ್ಲ. ಜ್ಞಾನಕ್ಕೆ ಅರ್ಥ ಬರಬೇಕಾದರೆ ಕ್ರಿಯೆ ಬೇಕು. ಕನ್ನಡದ ಬಗ್ಗೆ ಪ್ರೀತಿ ಇರಬೇಕು. ಕನ್ನಡದ ಬಗ್ಗೆ ಪ್ರೀತಿ ಕಡಿಮೆಯಾಗಲು ಮೂಲ ಕಾರಣ ಜಾಗತೀಕರಣ. ಜಾಗತೀಕರಣದಿಂದಾಗಿ ಇಂಗ್ಲಿಷ್ಗೆ ಎಲ್ಲಿಲ್ಲದ ಪ್ರಾಶಸ್ತ್ಯ ಒದಗಿದೆ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಇಂಗ್ಲಿಷ್ ಕಲಿತರೆ ಮಾತ್ರ ಉದ್ಯೋಗ ಎಂಬುದು ಸಾಮಾನ್ಯನಿಗೂ ತಿಳಿದಿದೆ. ಹೀಗಾಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.ಈ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಲ್ಲಮಪ್ರಭು ಬೆಟ್ಟದೂರು ಹಾಗೂ ಗದಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾಲಚಂದ್ರ ಭರಮಗೌಡ್ರ ಅವರನ್ನು ಸನ್ಮಾನಿಸಲಾಯಿತು.
ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ವೀರಣ್ಣ ಗೋಟಡಕಿ, ಸೋಮಶೇಖರ ಪುರಾಣಿಕ, ವಿದ್ಯಾ ಗಂಜಿಹಾಳ, ಮಹೇಶ್ ಗಾಣಿಗೇರ, ನಾಗರಾಜ ಹಿರೇಮಠ, ಬಸವರಾಜ ಕಾಡಪ್ಪನವರ ಹಾಗೂ ಶಿವಾನಂದ ಹೊಂಬಳ ಇದ್ದರು. ಮಂಜುಳಾ ಹಾಸಲಕರ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಚೇರ್ಮನ್ ಐ.ಬಿ. ಬೆನಕೊಪ್ಪ ಪರಿಚಯಿಸಿದರು.