ಕನ್ನಡಪ್ರಭ ವಾರ್ತೆ ಬೆಳಗಾವಿ
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯ ರಾಜಕೀಯದಲ್ಲಿ ಇರಬೇಕು. ಹೈಕಮಾಂಡ್ ಅವರನ್ನು ಲೋಕಸಭೆ ಚುನಾವಣೆಗೆ ಸ್ಫರ್ಧಿಸಲು ಟಿಕೆಟ್ ನೀಡಬಾರದು ಎಂದು ಕೆಪಿಸಿಸಿ ಸದಸ್ಯೆ ಆಯಿಶಾ ಸನದಿ ಕಾಂಗ್ರೆಸ್ ಹೈಕಮಾಂಡ್ ಆಗ್ರಹಿಸಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರವೂ ದೊಡ್ಡದಿದೆ. ಅವರ ದೂರದೃಷ್ಟಿಯಿಂದ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಸಾಗುತ್ತಿವೆ. ಹೀಗಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯ ರಾಜಕೀಯದಲ್ಲಿ ಇರಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಇರುವ ಅನೇಕ ಅಭ್ಯರ್ಥಿಗಳು ಇದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ, ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ನನಗಾದರೂ ಸ್ಪರ್ಧಿಸಲು ಅವಕಾಶ ನೀಡಬೇಕು. ಕಾರಣ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಟ್ಟು ಮಹಿಳೆಯರಿಗಾದರೂ ಟಿಕೆಟ್ ನೀಡಬೇಕು. ಇಲ್ಲವಾದರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಥವಾ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿ. ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಹಗಲು ರಾತ್ರಿ ದುಡಿಯುತ್ತೇವೆ ಎಂದು ತಿಳಿಸಿದರು.ನಮ್ಮ ನಾಯಕ ರಾಜ್ಯ ರಾಜಕೀಯದಲ್ಲೇ ಇರಲಿ ಎಂಬುವುದು ನಮ್ಮ ಆಶಯ. ಹೈಕಮಾಂಡ್ ನಮ್ಮ ಮನವಿಗೆ ಸ್ಪಂದಿಸಿ ಅವರನ್ನು ರಾಜ್ಯ ರಾಜ್ಯಕೀಯದಲ್ಲಿ ಉಳಿಯಲು ಅವಕಾಶ ನೀಡಬೇಕು. ಅಲ್ಲದೆ, ಮುಂದಿನ ದಿನಗಳಲ್ಲಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಲತಾ ಮಾನೆ, ರೋಹಿಣಿ ಬಾಬಾಸೇಕ್, ಸಾರಂಬಿ ಜತ್ತಿ, ಹಸೀನಾ ಪಿರ್ಜಾದೆ ಮೊದಲಾದವರು ಇದ್ದರು.