ಭಟ್ಕಳ: ಮೋದಿ ಗಾಳಿ ಎಲ್ಲ ಮತಗಟ್ಟೆಗಳಲ್ಲಿಯೂ ಬಿಜೆಪಿಗೆ ಹೆಚ್ಚು ಮತವಾಗಿ ಪರಿವರ್ತನೆ ಆಗಬೇಕು ಎಂದು ಉತ್ತರ ಕನ್ನಡದ ಬಿಜೆಪಿಯ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಕ್ಷೇತ್ರದ ಸಂಚಾಲಕ ಗೋವಿಂದ ನಾಯ್ಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಧಮನಿಸಲು ಹೊರಟಿದೆ. ನಮ್ಮ ಕಾರ್ಯಕರ್ತರಿಗೆ ಜೈಲು, ಕೇಸು ಹೊಸದಲ್ಲ. ನಮ್ಮ ಕಾರ್ಯಕರ್ತರ ಮೇಲೆ ಗಡಿಪಾರು, ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ. ಕಾರ್ಯಕರ್ತನ ಮೇಲೆ ಹಾಕಿರುವ ಗಡಿಪಾರು ಕೇಸನ್ನು ಹಿಂಪಡೆಯಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಜನರು ತಕ್ಕ ಪಾಠ ಕಲಿಸಲಿದ್ದು, ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ, ಭಟ್ಕಳ ಕ್ಷೇತ್ರದ ಪ್ರಭಾರಿ ಡಾ. ಜಿ.ಜಿ. ಹೆಗಡೆ, ಮಾಜಿ ಶಾಸಕ ಸುನೀಲ ನಾಯ್ಕ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ, ಜೆಡಿಎಸ್ ಮುಖಂಡ ಟಿ.ಟಿ. ನಾಯ್ಕ ಮಾತನಾಡಿದರು. ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಭಟ್ಕಳ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಹಿರಿಯ ಮುಖಂಡರಾದ ಸುಬ್ರಾಯ ನಾಯ್ಕ, ಜೆಡಿಎಸ್ ಮುಖಂಡ ಈಶ್ವರ ನಾಯ್ಕ, ಈಶ್ವರ ದೊಡ್ಮನೆ, ರಾಜೇಶ ನಾಯ್ಕ ಸೇರಿದಂತೆ ಹಲವು ಮುಖಂಡರಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡ ಧನ್ಯಕುಮಾರ ಜೈನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ ನಾಯ್ಕ, ಶ್ರೀನಿವಾಸ ನಾಯ್ಕ ಮುಂತಾದವರು ಸಹಕರಿಸಿದರು. ಆರೋಗ್ಯದಲ್ಲಿ ಸುಧಾರಣೆ ಕಂಡ ಶಿವಾನಂದ ನಾಯ್ಕಭಟ್ಕಳದಲ್ಲಿ ಶಾಸಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದ ಶಿವಾನಂದ ನಾಯ್ಕರು ಕಳೆದ ಏಳೆಂಟು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಅವರು ಇದೀಗ ಚೇತರಿಸಿಕೊಂಡಿದ್ದು, ಗುರುವಾರ ಸಂಜೆ ಮುರುಡೇಶ್ವರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹತ್ತು ನಿಮಿಷಕ್ಕೂ ಅಧಿಕ ಸಮಯ ನಿರರ್ಗಳವಾಗಿ ಹಿಂದಿನ ಪಕ್ಷ ಸಂಘಟನೆ, ಬಿಜೆಪಿ ಬೆಳೆದ ರೀತಿ ಮುಂತಾದವುಗಳ ಬಗ್ಗೆ ಮಾತನಾಡಿದರು. ಶಿವಾನಂದ ನಾಯ್ಕರು ಅನಾರೋಗ್ಯದಿಂದ ಚೇತರಿಸಿಕೊಂಡು ಇಷ್ಟೊಂದು ಮಾತನಾಡಿರುವುದಕ್ಕೆ ವೇದಿಕೆಯಲ್ಲಿದ್ದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರೇ ಅಚ್ಚರಿ, ಸಂತಸ ಪಟ್ಟರು. ಶಿವಾನಂದ ನಾಯ್ಕ ಅವರು ಪಕ್ಷದಲ್ಲಿ ಮತ್ತೆ ಮಂಚೂಣಿಗೆ ಬರಲಿದ್ದಾರೆ ಎನ್ನುವ ಮಾತೂ ಕಾರ್ಯಕರ್ತರ ವಲಯದಲ್ಲಿ ಕೇಳಿ ಬಂತು.