ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಚಿತ್ರಕಲೆಯ ಮೂಲಕ ಬಾಲ್ಯದಿಂದಲೇ ಸನಾತನ ಧಾರ್ಮಿಕ ಪ್ರಜ್ಞೆ, ಸೃಜನಶೀಲತೆ ಬೆಳೆಸುವ ಪ್ರಯತ್ನ ಇದಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಶನಿವಾರ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾರಂಭದ ಉದ್ಘಾಟನೆ ನೆರವೇರಿಸಿದ ನಾಡೋಜ ಡಾ. ಜಿ.ಶಂಕರ್, ಮಹಾಲಕ್ಷ್ಮೀ ಬ್ಯಾಂಕ್ ಉಚ್ಚಿಲ ದಸರಾ ಮಹೋತ್ಸವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ನೀಡುತ್ತಿದ್ದು, ಪ್ರತಿವರ್ಷ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುತ್ತಿರುವುದು ಅಭಿನಂದನಾರ್ಹ ಎಂದರು.ಕಾರ್ಯಕ್ರಮದಲ್ಲಿ ಬ್ಯಾಂಕಿನ ವತಿಯಿಂದ ಕೇಕ್ ಕತ್ತರಿಸುವ ಮೂಲಕ ನಾಡೋಜ ಡಾ. ಜಿ.ಶಂಕರ್ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಪುಟಾಣಿ ಮಕ್ಕಳು ಗುಲಾಬಿ ಹೂ ನೀಡಿ ಶುಭಾಶಯ ಕೋರಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಶಿರ್ವ ಮಹಿಳಾ ಮಂಡಲ ಅಧ್ಯಕ್ಷೆ ಬಬಿತಾ ಅರಸ್, ಬ್ಯಾಂಕ್ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ವ್ಯವಸ್ಥಾಪನಾ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ, ಸ.ಪ್ರ. ವ್ಯವಸ್ಥಾಪಕಿ ಶಾರಿಕ ಕಿರಣ್ ಉಪಸ್ಥಿತರಿದ್ದರು. ಬ್ಯಾಂಕ್ ಸಿಬ್ಬಂದಿ ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಚಿತ್ರಕಲಾ ಸ್ಪರ್ಧೆಯಲ್ಲಿ 575 ಮಂದಿ ಭಾಗವಹಿಸಿದ್ದು, ತೀರ್ಪುಗಾರರಾಗಿ ಹಿರಿಯ ಕಲಾವಿದರಾದ ರಮೇಶ್ ಕಿದಿಯೂರು, ಶೇಖರ್ ಕಲಾಪ್ರತಿಭಾ, ಶ್ರೀಧರ್ ತೊಟ್ಟಂ ಸಹಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.