ಅಂಬೇಡ್ಕರ್, ಬಾಬು ಜಗಜೀವನ ರಾಂ ಜನ್ಮದಿನಾಚರಣೆ
ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಸಮಾನತೆಯಿಂದ ಬದುಕುತ್ತಿದ್ದೇವೆ. ನಮಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಸಂವಿಧಾನದಿಂದ ಲಭಿಸಿವೆ. ನಾವು ಸಂವಿಧಾನಕ್ಕೆ ಗೌರವ ಕೊಟ್ಟು ಬದುಕಬೇಕು ಎಂದು ತಹಸೀಲ್ದಾರ್ ಪ್ರವೀಣ್ ಕರಾಂಡೆ ನುಡಿದರು.ಪಪಂ ಸಭಾಭವನದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಪಂ ಹೊನ್ನಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಮತ್ತು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 119ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯೇಸು ಬೆಂಗಳೂರು ಮಾತನಾಡಿ, ಎಲ್ಲ ಧರ್ಮಗಳಿಗೆ ಅವರದೇ ಆದಂತಹ ಗ್ರಂಥಗಳಿದ್ದರೇ, ಭಾರತದಲ್ಲಿ ಪ್ರಜೆಗಳಾಗಿ ಬದುಕಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ದೊಡ್ಡ ಗ್ರಂಥವಾಗಿದೆ ಎಂದರು.ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ವಿಶಾಲ್ ಉಪನ್ಯಾಸ ನೀಡಿದರು.ಸಿಡಿಪಿಓ ವನಿತಾ ದೇಶಭಂಡಾರಿ, ಬಿಇಓ ಜಯಶ್ರೀ ನಾಯ್ಕ, ಕರವೇ ಅಧ್ಯಕ್ಷ ಮಂಜುನಾಥ್ ಗೌಡ, ಜಿಲ್ಲಾ ಮುಕ್ರಿ ಸಮಾಜದ ಜಿಲ್ಲಾಧ್ಯಕ್ಷೆ ಮಂಜಳಾ ಮುಕ್ರಿ, ಹೊನ್ನಾವರ ಉಳಿಸಿ ಬೆಳೆಸಿ ಅಧ್ಯಕ್ಷ ಜಿ.ಎನ್. ಗೌಡ, ಡಾ. ಜಿ.ಪಿ. ಪಾಠಣಕರ, ಎಂ.ಜಿ. ಹೆಗಡೆ, ಜಿ.ಟಿ. ಹಳ್ಳೇರ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಣ್ಣಪ್ಪ ಮುಕ್ರಿ, ರವಿ ಮುಕ್ರಿ ಹಾಜರಿದ್ದರು.ಇದೇ ವೇಳೆ ೨೦೨೪-೨೫ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹಾಗೂ ಪೌರಕಾರ್ಮಿಕರನ್ನು ಇದೇ ವೇಳೆ ಸನ್ಮಾನಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.