ಹಿರೇಕೆರೂರು: ಪ್ರತಿಯೊಬ್ಬರೂ ನಮ್ಮ ಸಂವಿಧಾನ ನಮಗೆ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ನಿಭಾಯಿಸಿ, ಸ್ವಾತಂತ್ರ್ಯ ತಂದುಕೊಟ್ಟ ಹಿರಿಯರ ಕನಸುಗಳನ್ನು ನನಸು ಮಾಡುವ ಪಣ ತೊಡಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ಪಟ್ಟಣದ ಪೊಲೀಸ್ ಮೈದಾನದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಏರ್ಪಡಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವತಂತ್ರ ಭಾರತದಲ್ಲಿ ಜನತೆಗೆ ನೆಮ್ಮದಿ ಬದುಕನ್ನು ನೀಡುವ ಹಾಗೂ ಸಮಸ್ಯೆಗಳಿಂದ ದೂರವಿರುವ ಬದುಕನ್ನು ನೀಡುವ ಭಾರತ ನಿರ್ಮಾಣ ಮಾಡುವುದು ಎಲ್ಲರ ಗುರಿಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನರು ಉತ್ತಮವಾದ ಜೀವನ ನಡೆಸುವ ದಿಕ್ಕಿನಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡವರು ನೆಮ್ಮದಿಯ ಜೀವನ ಸಾಗಿಸಲು ಅನಕೂಲ ಕಲ್ಪಿಸಿದೆ. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಭ್ಯಾಸ ಮಾಡಿ ಭವ್ಯ ಭಾರತದ ಪ್ರಜೆಗಳಾಗಬೇಕು ಎಂದರು.ತಹಸೀಲ್ದಾರ್ ರೇಣುಕಾ ಎಂ. ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಅತಿ ಹೆಚ್ಚು ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು.
ಸವಣೂರು: ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದ ಅನೇಕ ಮಹನೀಯರು ತ್ಯಾಗ, ಬಲಿದಾನದಿಂದ ದೇಶ ಸ್ವತಂತ್ರವಾಯಿತು. ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭಾರತ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿರುವುದರಿಂದ ಭಾರತ ವಿಶ್ವಗುರುವಾಗಿ ದಾಪುಗಾಲು ಇಡುತ್ತಿದೆ ಎಂದರು.ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.2024- 25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತಾಲೂಕಿಗೆ ಪ್ರಥಮ, ದ್ವೀತಿಯ, ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರವಿಕುಮಾರ ಕೊರವರ, ಗ್ರೇಡ 2 ತಹಸೀಲ್ದಾರ್ ಗಣೇಶ ಸವಣೂರ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಬಸವರಾಜ ಹೊಸಮನಿ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ತಾಪಂ ಇಒ ಬಿ.ಎಸ್, ಶಿಡೇನೂರ, ಸಿಪಿಐ ದೇವಾನಂದ ಎಸ್., ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಎಂ.ಜೆ. ಮುಲ್ಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ, ಪುರಸಭೆ ಅಧ್ಯಕ್ಷ ಅಲ್ಲಾವುದೀನ ಮನಿಯಾರ, ಜೀಶಾನ ಪಠಾಣ, ಕೆಡಿಪಿ ಸದಸ್ಯ ರವಿ ಕರಿಗಾರ, ಗಂಗಾಧರ ಬಾಣದ, ಮಹೇಶ ಸಾಲಿಮಠ, ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷ ಹರೀಶ ಪಾಟೀಲ, ರಾಮಣ್ಣ ಅಗಸರ, ಪರಶುರಾಮ ಇಳಗೇರ, ಪ್ರಕಾಶ ಜಮಾದರ ಇತರರು ಇದ್ದರು.ತಾಲೂಕು ಕ್ರೀಡಾಂಗಣವು ಮಳೆಯಿಂದ ಕೆಸರು ಗದ್ದೆಯಂತಾಗಿತ್ತು. ಇದರಿಂದ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು.