ಶಿರಸಿ: ನೂತನ ಶಿಕ್ಷಣ ನೀತಿ ಜಾರಿಗೊಂಡಾಗ ನಮ್ಮ ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ನೀಡಲು ಸಾಧ್ಯ. ಎಲ್ಲ ಗೊಂದಲದಿಂದ ಹೊರಬಂದು ರಾಜ್ಯ ಸರ್ಕಾರ ಎನ್ಇಪಿ ಜಾರಿಗೊಳಿಸಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಮಾತನಾಡಿ, ಮೂಲಭೂತ ಸೌಕರ್ಯ ಸರಿಯಾಗಿ ಒದಗಿಸಿದಾಗ ಆರ್ಥಿಕವಾಗಿ ಸುಧಾರಣೆಯಾಗುತ್ತದೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಮಾತನಾಡಿ, ಶಿಕ್ಷಣ ಬಹಳ ಮಹತ್ವ, ವ್ಯಕ್ತಿ, ಸಮಾಜ ಸುಧಾರಣೆಗೆ ಹಾಗೂ ದೇಶದ ಅಭಿವೃದ್ಧಿಗೆ ಶಿಕ್ಷಣ ಮಹತ್ವದ್ದಾಗಿದೆ. ರಾಜ್ಯದಲ್ಲಿ ಒಟ್ಟೂ ೬೪,೬೮೯ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಖಾಲಿ ಇರುವುದರಿಂದ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ? ನಿವೃತ್ತಿ ಹಾಗೂ ರಾಜೀನಾಮೆ ನೀಡಿದ್ದರಿಂದ ಖಾಲಿಯಾದ ಹುದ್ದೆ ಭರ್ತಿ ಮಾಡಲು ಸರ್ಕಾರ ಕ್ರಮ ವಹಿಸಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯವನ್ನು ನೀಡಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿಯೂ ಅನುಷ್ಠಾನಗೊಳಿಸಲು ಸರ್ಕಾರ ಚಿಂತನೆ ಮಾಡಬೇಕು ಎಂದರು.ಶಾಸಕ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ಎಂಇಎಸ್ ಶಿಕ್ಷಣ ಸಂಸ್ಥೆಯಲ್ಲಿ ಮೂಲಸೌಕರ್ಯದ ಜತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು. ಶಿರಸಿಯಲ್ಲಿ ಎಂಜಿನಿಯರಿಂಗ್ ಅಥವಾ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾನೂನು ಸಡಿಲಗೊಳಿಸಬೇಕು. ನಾವೆಲ್ಲರೂ ಒಗ್ಗಟ್ಟಾಗಿ ನಾವೆಲ್ಲರೂ ಪ್ರಯತ್ನಿಸಬೇಕಿದೆ ಎಂದರು.
ಎಂಇಎಸ್ ಉಪಾಧ್ಯಕ್ಷ ನಿತೀನ ಕಾಸರಗೋಡು, ಎಂ.ಜಿ. ಹೆಗಡೆ ಗಡಿಕೈ ಉಪಸ್ಥಿತರಿದ್ದರು. ಚೈತನ್ಯ ಕಾಲೇಜು ಸಮಿತಿ ಅಧ್ಯಕ್ಷ ಎ.ಬಿ. ಲೋಕೇಶ ಹೆಗಡೆ ಚೈತನ್ಯ ಕಾಲೇಜು ನಡೆದು ಬಂದ ಹಾದಿಯ ಕುರಿತು ವರದಿ ಮಂಡಿಸಿದರು. ಎಂಇಎಸ್ ಸಂಸ್ಥೆಯ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಸ್ವಾಗತಿಸಿದರು. ಉಪನ್ಯಾಸಕಿ ಮೇಘನಾ ಹೆಗಡೆ ಹಾಗೂ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ದಾನಿಗಳಿಗೆ ಸನ್ಮಾನ: ಟಿಎಂಎಸ್ ಸಂಸ್ಥೆಯ ಪರವಾಗಿ ಅಧ್ಯಕ್ಷ ಜಿ.ಟಿ. ಹೆಗಡೆ ತಟ್ಟೀಸರ, ಮಾಜಿ ಅಧ್ಯಕ್ಷ ಜಿ.ಎಂ. ಹೆಗಡೆ ಹುಳಗೋಳ, ಆರ್.ಎನ್. ಹೆಗಡೆ ಬಂಡಿ ಮತ್ತು ಕಟ್ಟಡ ನಿರ್ಮಿಸಿದ ಎಂಜಿನಿಯರ್ಸ್ಗಳನ್ನು ಗೌರವಿಸಲಾಯಿತು.