ಮಾಗಡಿ: ವಿದ್ಯಾಥಿಗಳು ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯಾನಾಥ ಸ್ವಾಮೀಜಿ ಹೇಳಿದರು.
ಕಾರ್ಯಕ್ರಮಕ್ಕೆ ಬೇರೆ ಅತಿಥಿಗಳನ್ನು ಕರೆಸುವ ಬದಲು ನಮ್ಮದೇ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನ ಕರೆಸಿ ಅವರ ಅನುಭವಗಳನ್ನು ಇಂದಿನ ಮಕ್ಕಳಿಗೆ ತಿಳಿಸಿದರೆ, ಅವರಿಗೂ ಪ್ರೇರಣೆಯಾಗಲಿದೆ. ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಎಲ್ಲಾ ರೀತಿಯ ಸೌಲಭ್ಯಗಳು, ವಿವಿಧ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಮಾಗಡಿ ಕಾಲೇಜು ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಸತತವಾಗಿ ಪ್ರಥಮ ಸ್ಥಾನ ಪಡೆಯುವ ಮೂಲಕ ನಮ್ಮ ಸಂಸ್ಥೆಗೆ ಕೀರ್ತಿ ತರುತ್ತಿದ್ದು ಇದನ್ನೇ ಮುಂದುವರಿಸಿಕೊಂಡು ಹೋಗುವಂತೆ ಶ್ರೀಗಳು ಹಾರೈಸಿದರು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ದೂರ ದೃಷ್ಟಿಯಿಂದ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಗ್ರಾಮೀಣರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದು, ಇಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಉದ್ಯೋಗದಲ್ಲಿರುವುದು ಹೆಮ್ಮೆಯ ವಿಚಾರವಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ನೀವು ಓದುತ್ತಿರುವ ಘಟ್ಟ ನಿಮ್ಮ ಮುಂದಿನ ಭವಿಷ್ಯಕ್ಕೆ ಬುನಾದಿಯಾಗಲಿದೆ ಎಂದು ತಿಳಿಸಿದರು.ಇದೇ ವೇಳೆ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ರೀಡೆಯಲ್ಲಿ ಮತ್ತು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಗಡಿ ಸಿಪಿಐ ಗಿರಿರಾಜ್, ಪ್ರಾಂಶುಪಾಲ ಉಮೇಶ್, ರಂಗನಾಥ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಜಸಿಂಹ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪೋಟೋ 30ಮಾಗಡಿ1 :
ಮಾಗಡಿಯ ಬಿಜಿಎಸ್ ಕಾಲೇಜು ಸಾಂಸ್ಕೃತಿಕ ಉತ್ಸವಕ್ಕೆ ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಚಾಲನೆ ನೀಡಿದರು.