ಬಳ್ಳಾರಿ: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿ ಸಮೂಹ ಆಸಕ್ತಿ ಬೆಳೆಸಿಕೊಳ್ಳುವುದರ ಮೂಲಕ ದೇಶದ ತಾಂತ್ರಿಕ ಸಾಮರ್ಥ್ಯಕ್ಕೆ ಕೊಡುಗೆ ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
ಬಾಹ್ಯಾಕಾಶ ಅಧ್ಯಯನ ಕುರಿತಂತೆ ಯಾವುದೇ ಒಂದು ಯೋಜನೆಯ ಯಶಸ್ಸಿನ ಹಿಂದೆ ಹಲವಾರು ವಿಜ್ಞಾನಿಗಳ ಪೂರ್ವ ತಯಾರಿ, ಅವರ ಕಠಿಣ ಪರಿಶ್ರಮ ಅಡಗಿದೆ. ಅವರ ಬದುಕು ವಿಶಿಷ್ಟವಾದುದು ಎಂದು ಬಣ್ಣಿಸಿದರು.
ಇಂದಿನ ಯುವಪೀಳಿಗೆಯು ಸಾಧನೆಯ ಗುರಿ ಇಟ್ಟುಕೊಂಡು ಯಶಸ್ಸಿನ ಪಥದಲ್ಲಿ ಸಾಗಬೇಕು ಎಂದು ವಿದ್ಯಾರ್ಥಿ ಸಮೂಹಕ್ಕೆ ಕಿವಿಮಾತು ಹೇಳಿದರು.ಇಸ್ರೋ ವಿಜ್ಞಾನಿ ವಿ.ಚಂದ್ರಬಾಬು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ರಾಷ್ಟ್ರೀಯ ಬಾಹ್ಯಾಕಾಶ ದಿನವು ಸಾಧನೆಗಳ ಸ್ಮರಣೆ ಮತ್ತು ಭವಿಷ್ಯದ ಅನ್ವೇಷಣೆಗಳ ಮಹತ್ವ ಸಾರಲು ಮುಖ್ಯವಾಗಿದೆ ಎಂದು ಹೇಳಿದರು.
ಭಾರತದ ಬಾಹ್ಯಾಕಾಶ ಅನ್ವೇಷಣೆಗಳು ಕೇವಲ ಅಸಾಧಾರಣ ವೈಜ್ಞಾನಿಕ ಸಾಧನೆಗಳಿಗೆ ಸೀಮಿತವಾಗಿರದೇ ಭಾರತೀಯರ ದೈನಂದಿನ ಜೀವನದ ಮೇಲೂ ಧನಾತ್ಮಕ ಬದಲಾವಣೆ ಬೀರುತ್ತದೆ. ತಾಂತ್ರಿಕ ಅಭಿವೃದ್ಧಿಗಳು ಮತ್ತು ಬಾಹ್ಯಾಕಾಶ ಅನ್ವೇಷಣೆಗಳಲ್ಲಿನ ಯಶಸ್ಸು ಸಾಧಿಸಲು ಹಲವಾರು ಸಂಶೋಧನೆ ಕೈಗೊಳ್ಳಲು ಯತ್ನ ನಡೆಸುತ್ತಿದೆ ಎಂದು ಅವರು ವಿಶ್ಲೇಷಿಸಿದರು.
ಕಾರ್ಯಕ್ರಮದಲ್ಲಿ ಉಪಗ್ರಹ ಮತ್ತು ರಾಕೆಟ್ಗಳ ತಯಾರಿಕೆ, ಅವುಗಳ ಕಾರ್ಯಕ್ಷಮತೆ, ವಿವಿಧ ಹಂತಗಳಲ್ಲಿ ಬೆಳೆದು ಬಂದ ಹಾದಿಯ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಅಲ್ಲದೆ, ಉಪಗ್ರಹ, ರಾಕೆಟ್ಗಳ ಉಡಾವಣೆಯ ಬಗೆಯನ್ನು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ತೋರಿಸಿಕೊಟ್ಟರು.
ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಂ., ಯೋಜನಾ ನಿರ್ದೇಶಕ ವಿನೋದಕುಮಾರ್, ಎನ್ಐಸಿ ಕೇಂದ್ರದ ತಾಂತ್ರಿಕ ನಿರ್ದೇಶಕ ಶಿವಪ್ರಸಾದ್ ವಸ್ತ್ರದ್, ಕಾರ್ಯಕ್ರಮ ಸಂಯೋಜಕ ರಾಮಚಂದ್ರ ರೆಡ್ಡಿ ಜಿ.ಬಿ. ಸೇರಿದಂತೆ ವಿವಿಧ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.